ವಾಧ್ರಾಗೆ ವಿದೇಶಕ್ಕೆ ಪ್ರಯಾಣಿಸಲು ಕೋರ್ಟ್ ಅನುಮತಿ
ಹೊಸದಿಲ್ಲಿ,ಸೆ.13: ಕಪ್ಪುಹಣ ಬಿಳುಪುಗೊಳಿಸಿ ಪ್ರಕರಣದಲ್ಲಿ ಆರೋಪಿ ಯಾಗಿರುವ ರಾಬರ್ಟ್ ವಾಧ್ರಾ ವಿದೇಶಕ್ಕೆ ಪ್ರಯಾಣಿಸುವುದಕ್ಕೆ ದಿಲ್ಲಿಯ ವಿಶೇಷ ನ್ಯಾಯಾಲಯ ಶುಕ್ರವಾರ ಅನುಮತಿ ನೀಡಿದೆ. ಇದೇ ಸಂದರ್ಭದಲ್ಲಿ ವಾಧ್ರಾ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನೂ ನ್ಯಾಯಾಲಯ ಪುರಸ್ಕರಿಸಿದೆ.
ಕಪ್ಪುಹಣ ಬಿಳುಪು ಪ್ರಕರಣದಲ್ಲಿ ಆರೋಪಿಯಾಗಿರುವ ರಾಬರ್ಟ್ ವಾಧ್ರಾ ವಿದೇಶಗಳಿಗೆ ಪ್ರಯಾಣಿಸಲು ಅನುಮತಿ ಕೋರಿ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಕಳೆದ ಕೆಲವು ವರ್ಷಗಳಿಂದ ವಾಧ್ರಾ ಅವರು ದೇಶದ ತನಿಖಾ ಸಂಸ್ಥೆಗಳಲ್ಲಿ ನಿಗಾದಲ್ಲಿದ್ದಾರೆ. ಕಪ್ಪು ಹಣ ಬಿಳುಪು ಪ್ರಕರಣಕ್ಕೆ ಸಂಬಂಧಿಸಿ ಹಲವಾರು ಸಂದರ್ಭಗಳಲ್ಲಿ ವಾಧ್ರಾ ಅವರನ್ನು ಪ್ರಶ್ನಿಸಲಾಗಿತ್ತು.
ಈ ಮಧ್ಯೆ ಕಾಂಗ್ರೆಸ್ ಪಕ್ಷವು ವಾಧ್ರಾ ವಿರುದ್ಧದ ಆರೋಪಗಳನ್ನು ತಳ್ಳಿಹಾಕಿದೆ. ಬಿಜೆಪಿಯು ವಾಧ್ರಾ ವಿರುದ್ಧ ರಾಜಕೀಯ ಸೇಡು ತೀರಿಸುತ್ತಿದೆಯೆಂದು ಅದು ಆರೋಪಿಸಿದೆ.
ಕಪ್ಪು ಹಣ ಬಿಳುಪುಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ ವಾಧ್ರಾ ವಿರುದ್ಧ ತನಿಖೆ ನಡೆಸುತ್ತಿರುವ ತನಿಖಾಸಂಸ್ಥೆಯು, ಅವರಿಗೆ ವಿದೇಶಕ್ಕೆ ಪ್ರಯಾಣಿಲು ಅನುಮತಿ ನೀಡಿರುವುದನ್ನು ಪ್ರಬಲವಾಗಿ ವಿರೋಧಿಸಿತು. ಈ ಹಿಂದೆ ನ್ಯಾಯಾಲಯದ ಅನುಮತಿ ಪಡೆಯದೆ ವಾಧ್ರಾ ದೇಶವನ್ನು ತೊರೆಯದಂತೆ ನ್ಯಾಯಾಲಯ ಆದೇಶಿಸಿತ್ತು.
ಆದಾಗ್ಯೂ, ವೈದ್ಯಕೀಯ ಚಿಕಿತ್ಸೆಗಾಗಿ ಲಂಡನಗೆ ಪ್ರಯಾಣಿಸಲು ಅವಕಾಶ ನೀಡುವಂತೆ ವಾಧ್ರಾ ಅವರು ಜೂನ್ನಲ್ಲಿ ಮನವಿ ಸಲ್ಲಿಸಿದ್ದರು.