ಕಾಶ್ಮೀರದಲ್ಲಿ ಭದ್ರತಾ ಪಡೆ - ಪ್ರತಿಭಟನಕಾರರ ನಡುವೆ ಘರ್ಷಣೆ
ಸಾಂದರ್ಭಿಕ ಚಿತ್ರ
ಶ್ರೀನಗರ, ಅ. 29: ಕಾಶ್ಮೀರದಲ್ಲಿ ಮಂಗಳವಾರ ಭದ್ರತಾ ಪೆಡೆ ಹಾಗೂ ಪ್ರತಿಭಟನಕಾರರ ನಡುವೆ ಸಂಭವಿಸಿದ ಘರ್ಷಣೆಯಲ್ಲಿ ಕನಿಷ್ಠ ನಾಲ್ವರು ಗಾಯಗೊಂಡಿದ್ದಾರೆ.
ಜಮ್ಮು ಹಾಗೂ ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ವಿಧಿ 370ನ್ನು ರದ್ದುಗೊಳಿಸಿದ ಹಿನ್ನೆಲೆಯಲ್ಲಿ ಜಮ್ಮು ಹಾಗೂ ಕಾಶ್ಮೀರದ ಪರಿಸ್ಥಿತಿಯನ್ನು ಪ್ರತ್ಯಕ್ಷವಾಗಿ ಮೌಲ್ಯಮಾಪನಕ್ಕೆ ಒಳಪಡಿಸಲು ಐರೋಪ್ಯ ಒಕ್ಕೂಟದ ಸಂಸದರ ನಿಯೋಗ ಇಲ್ಲಿಗೆ ಆಗಮಿಸಿದ ದಿನವೇ ಈ ಘರ್ಷಣೆ ನಡೆದಿದೆ.
ಕಾಶ್ಮೀರ ಹಾಗೂ ನಗರದ ವಿವಿಧ ಭಾಗಗಳಲ್ಲಿ ಭದ್ರತಾ ಪಡೆ ಹಾಗೂ ಪ್ರತಿಭಟನಕಾರರ ನಡುವೆ ಘರ್ಷಣೆ ನಡೆದಿದೆ. ಇದರಿಂದ ನಾಲ್ಕು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ವಿಧಿ 370 ರದ್ದು ಹಾಗೂ ಜಮ್ಮುಕಾಶ್ಮೀರವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿದ 86ನೇ ದಿನವಾದ ಮಂಗಳವಾರ ಕಾಶ್ಮೀರದಲ್ಲಿ ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿದೆ.
ಘರ್ಷಣೆಯ ಕಾರಣದಿಂದ ಮಾರುಕಟ್ಟೆ ಮುಚ್ಚಿದ್ದವು. ವಾಹನಗಳು ರಸ್ತೆಗಿಳಿಯಲಿಲ್ಲ. ವ್ಯಾಪಾರಿಗಳು ವ್ಯಾಪಾರ ನಡೆಸಲಿಲ್ಲ ಎಂದು ಅವರು ತಿಳಿಸಿದ್ದಾರೆ.