ಬಿಸಿ ಸಾಂಬಾರ್ ಪಾತ್ರೆಗೆ ಬಿದ್ದು ಯುಕೆಜಿ ವಿದ್ಯಾರ್ಥಿ ಮೃತ್ಯು
ಕರ್ನೂಲ್, ನ. 14: ಇಲ್ಲಿನ ಪನ್ಯಾಮ್ನ ಖಾಸಗಿ ಶಾಲೆಯೊಂದರ ಹಾಸ್ಟೆಲ್ನಲ್ಲಿ ಶುಕ್ರವಾರ ಸಾಂಬಾರ್ ಪಾತ್ರೆಗೆ ಬಿದ್ದು ಯುಕೆಜಿ ವಿದ್ಯಾರ್ಥಿಯೋರ್ವ ದಾರುಣವಾಗಿ ಮೃತಪಟ್ಟ ಘಟನೆ ಸಂಭವಿಸಿದೆ.
ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಯ ಕುಟುಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರ ಧನ ನೀಡುವಂತೆ ಆಗ್ರಹಿಸಿ ವಿವಿಧ ವಿದ್ಯಾರ್ಥಿ ಸಂಘಟನೆಗಳು ಧರಣಿ ನಡೆಸಿದವು. ವಿದ್ಯಾರ್ಥಿಯ ಸಾವಿನ ಹೊಣೆಯನ್ನು ಶಾಲೆಯ ಆಡಳಿತ ಮಂಡಳಿ ಹೊರಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.
ಯುಕೆಜಿಯಲ್ಲಿ ಕಲಿಯುತ್ತಿರುವ ನಾಲ್ಕು ವರ್ಷದ ಪುರುಷೋತ್ತಮ ರೆಡ್ಡಿ ತನ್ನ ಗೆಳೆಯರೊಂದಿಗೆ ಆಟವಾಡುತ್ತಿದ್ದಾಗ ಬಿಸಿ ಸಾಂಬಾರ್ ಪಾತ್ರೆಗೆ ಬಿದ್ದಿದ್ದ. ಗಂಭೀರ ಗಾಯಗೊಂಡಿದ್ದ ಆತನನ್ನು ಕೂಡಲೇ ಕರ್ನೂಲ್ನ ಜನರಲ್ ಆಸ್ಪತ್ರೆಗೆ ವರ್ಗಾಯಿಸಲಾಯಿತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟ ಎಂದು ಪೊಲೀಸರು ತಿಳಿಸಿದ್ದಾರೆ.
ನ್ಯಾಯ ನೀಡುವಂತೆ ಆಗ್ರಹಿಸಿ ಶಾಲೆಯ ಮುಂದೆ ನಡೆದ ಪ್ರತಿಭಟನೆಯಲ್ಲಿ ಪುರುಷೋತ್ತಮ ರೆಡ್ಡಿಯ ತಂದೆ ಶ್ಯಾಮ್ಸುಂದರ ರೆಡ್ಡಿ ಹಾಗೂ ತಾಯಿ ಕಲ್ಪನಾ ರೆಡ್ಡಿ ಪಾಲ್ಗೊಂಡರು.