ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಸುಪ್ರೀಂ ಕದ ತಟ್ಟಿದ ಟಿಎಂಸಿ ಸಂಸದೆ ಮಹುವಾ ಮೊಯಿತ್ರ
ಹೊಸದಿಲ್ಲಿ: ತೃಣಮೂಲ ಕಾಂಗ್ರೆಸ್ ಪಕ್ಷದ ನಾಯಕಿ ಹಾಗೂ ಸಂಸದೆ ಮಹುವಾ ಮೊಯಿತ್ರ ಶುಕ್ರವಾರ ಪೌರತ್ವ(ತಿದ್ದುಪಡಿ) ಕಾಯ್ದೆ ವಿರುದ್ಧ ಸುಪ್ರೀಂ ಕೋರ್ಟಿಗೆ ಅಪೀಲು ಸಲ್ಲಿಸಿದ್ದಾರೆ ಹಾಗೂ ತಮ್ಮ ಅಪೀಲನ್ನು ತುರ್ತಾಗಿ ವಿಚಾರಣೆಗೆ ಎತ್ತಿಕೊಳ್ಳುವಂತೆ ಮನವಿ ಮಾಡಿದ್ದಾರೆ.
ಮಹುವಾ ಅವರ ಅಪೀಲನ್ನು ತುರ್ತಾಗಿ ವಿಚಾರಣೆಗೆ ಕೈಗೆತ್ತಿಕೊಳ್ಳಬೇಕೆಂದು ಅವರ ವಕೀಲರು ಮಾಡಿದ ಮನವಿಯನ್ನು ಪರಿಗಣಿಸಿ ಸಂಬಂಧಿತ ಅಧಿಕಾರಿ ಬಳಿ ತೆರಳುವಂತೆ ನ್ಯಾಯಾಲಯ ಹೇಳಿದೆ.
ಪೌರತ್ವ ತಿದ್ದುಪಡಿ ಕಾಯ್ದೆಯ ಕಾನೂನುಬದ್ಧತೆಯನ್ನು ಪ್ರಶ್ನಿಸಿ ರಿಹಾಯಿ ಮಂಚ್ ಹಾಗೂ ಸಿಟಿಜನ್ಸ್ ಅಗೇನ್ಸ್ಟ್ ಹೇಟ್ ಎಂಬ ಎರಡು ಎನ್ ಜಿಒಗಳು ಕೂಡ ಜಂಟಿಯಾಗಿ ಅಪೀಲು ಸಲ್ಲಿಸಿವೆ. ಜನ್ ಅಧಿಕಾರ್ ಪಾರ್ಟಿಯ ಪ್ರಧಾನ ಕಾರ್ಯದರ್ಶಿ ಫಝ್ಲಿ ಅಹ್ಮದ್ ಕೂಡ ಸುಪ್ರೀಂ ಕೋರ್ಟ್ ಕದ ತಟ್ಟಿದ್ದಾರಲ್ಲದೆ, ಸಂವಿಧಾನದ ಮೂಲತತ್ವವನ್ನೇ ಉಲ್ಲಂಘಿಸುವ ಈ ಕಾಯ್ದೆಯನ್ನು ರದ್ದುಪಡಿಸಬೇಕೆಂದು ಕೋರಿದ್ದಾರೆ.
ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಗುರುವಾರವೇ ಕಾಯ್ದೆ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತು. ತರುವಾಯ ಕೇರಳದ ವಿಪಕ್ಷ ನಾಯಕ ರಮೇಶ್ ಚೆನ್ನಿತ್ತಲ ಕೂಡ ನ್ಯಾಯಾಲಯದ ಮೊರೆ ಹೋಗಲು ನಿರ್ಧರಿಸಿದ್ದಾರೆ.