ಪೌರತ್ವ ಕಾಯ್ದೆ ವಿರೋಧಿಸಿ ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲು ಡಿಎಂಕೆ ಆಗ್ರಹ
ಚೆನ್ನೈ, ಜ.2: ಪೌರತ್ವ ಕಾಯ್ದೆಯನ್ನು ವಿರೋಧಿಸಿ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಬೇಕೆಂದು ಡಿಎಂಕೆ ಪಕ್ಷದ ಶಾಸಕರು ತಮಿಳುನಾಡು ವಿಧಾನಸಭೆಯ ಸ್ಪೀಕರ್ಗೆ ಮನವಿ ಮಾಡಿದ್ದಾರೆ.
ತಮಿಳುನಾಡು ವಿಧಾನಸಭೆಯ ಅಧಿವೇಶನ ಜನವರಿ 6ರಿಂದ ಆರಂಭವಾಗಲಿದೆ. ಮಂಗಳವಾರ ಕೇರಳ ವಿಧಾನಸಭೆಯಲ್ಲಿ ಪೌರತ್ವ ಕಾಯ್ದೆ ವಿರೋಧಿಸಿ ನಿರ್ಣಯ ಅಂಗೀಕರಿಸಲಾಗಿದ್ದು ಇದೇ ರೀತಿ ತಮಿಳುನಾಡು ವಿಧಾನಸಭೆಯಲ್ಲೂ ನಿರ್ಣಯ ಅಂಗೀಕರಿಸಬೇಕು ಎಂದು ವಿಧಾನಸಭೆಯ ಕಾರ್ಯದರ್ಶಿ ಕೆ ಶ್ರೀನಿವಾಸನ್ರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಬಳಿಕ ಡಿಎಂಕೆ ಪಕ್ಷದ ಶಾಸಕರು ಸುದ್ದಿಗಾರರಿಗೆ ತಿಳಿಸಿದ್ದಾರೆ.
ಪಂಜಾಬ್ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿಗಳೂ ಪೌರತ್ವ ಕಾಯ್ದೆಯನ್ನು ತಮ್ಮ ರಾಜ್ಯದಲ್ಲಿ ಜಾರಿಗೊಳಿಸುವುದಿಲ್ಲ ಎಂದು ಈಗಾಗಲೇ ಹೇಳಿಕೆ ನೀಡಿದ್ದಾರೆ. ಆದರೆ ಪೌರತ್ವ ಕಾಯ್ದೆ ಇಡೀ ದೇಶಕ್ಕೆ ಅನ್ವಯಿಸುತ್ತದೆ. ಪೌರತ್ವ ಕಾಯ್ದೆಗೆ ಸಂಬಂಧಿಸಿದ ಯಾವುದೇ ನಿರ್ಣಯ ಕೈಗೊಳ್ಳಲು ಸಂಸತ್ಗೆ ಮಾತ್ರ ಅಧಿಕಾರವಿದೆ, ವಿಧಾನಸಭೆಗೆ ಇಲ್ಲ ಎಂದು ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಪ್ರತಿಕ್ರಿಯಿಸಿದ್ದಾರೆ.