ದಿಲ್ಲಿ ಹಿಂಸಾಚಾರ: ಅಮಿತ್ ಶಾ ನೇತೃತ್ವದಲ್ಲಿ ಸಭೆ
ಹೊಸದಿಲ್ಲಿ, ಫೆ. 25: ಅಮಿತ್ ಶಾ ಅವರೊಂದಿಗಿನ ಸಭೆಯಲ್ಲಿ ಸಕಾರಾತ್ಮಕ ಅಭಿಪ್ರಾಯ ವ್ಯಕ್ತವಾಗಿದೆ. ಸರ್ವ ಪಕ್ಷಗಳು ದಿಲ್ಲಿಯಲ್ಲಿ ಶಾಂತಿ ಸ್ಥಾಪಿಸಲು ಒತ್ತು ನೀಡಿವೆ ಎಂದು ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮಂಗಳವಾರ ತಿಳಿಸಿದ್ದಾರೆ.
‘‘ಪೊಲೀಸರು ತಮ್ಮ ಕೈಲಾದಷ್ಟು ಕೆಲಸ ಮಾಡುತ್ತಿದ್ದಾರೆ. ಯಾವ ಪಡೆ ಅಗತ್ಯ ಇದೆಯೋ ಅದನ್ನು ಪೂರೈಸುವುದಾಗಿ ಕೇಂದ್ರ ಗೃಹ ಸಚಿವರು ಭರವಸೆ ನೀಡಿದ್ದಾರೆ’’ ಎಂದು ಅವರು ಹೇಳಿದರು. ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ಹಿಂಸಾಚಾರ ಆರಂಭವಾದ ಬಳಿಕ ಈಶಾನ್ಯ ದಿಲ್ಲಿಯ ಪರಿಸ್ಥಿತಿ ಕುರಿತು ಚರ್ಚೆ ನಡೆಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಗಳವಾರ ಸಭೆ ನಡೆಸಿದ್ದರು.
ಸಭೆಯಲ್ಲಿ ದಿಲ್ಲಿ ಲೆಫ್ಟಿನೆಂಟ್ ಜನರಲ್ ಅನಿಲ್ ಬೈಜಾಲ್, ಕೇಜ್ರಿವಾಲ್, ಪೊಲೀಸ್ ಆಯುಕ್ತ ಅಮೂಲ್ಯ ಪಟ್ನಾಯಕ್, ಕಾಂಗ್ರೆಸ್ ನಾಯಕ ಸುಭಾಷ್ ಚೋಪ್ರಾ, ಬಿಜೆಪಿಯ ಮನೋಜ್ ತೀವಾರಿ ಹಾಗೂ ರಾಮ್ವೀರ್ ಬಿಧುರಿ ಪಾಲ್ಗೊಂಡಿದ್ದರು.
Next Story