ಬಾಬರಿ ಮಸೀದಿ ಧ್ವಂಸ ಪ್ರಕರಣ ನ್ಯಾಯಾಲಯದಲ್ಲಿ ಹಾಜರಾದ ಬಿಜೆಪಿ ನಾಯಕ ಕಲ್ಯಾಣ್ ಸಿಂಗ್
ಲಕ್ನೊ, ಜು. 13: ಬಾಬರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿಯ ಹಿರಿಯ ನಾಯಕ ಕಲ್ಯಾಣ್ ಸಿಂಗ್ ಸೋಮವಾರ ಇಲ್ಲಿನ ಸಿಬಿಐ ವಿಶೇಷ ನ್ಯಾಯಾಲಯದ ಮುಂದೆ ಹಾಜರಾಗಿದ್ದಾರೆ.
ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ರಾಜಸ್ಥಾನದ ಮಾಜಿ ರಾಜ್ಯಪಾಲ 88ರ ಹರೆಯದ ಕಲ್ಯಾಣ ಸಿಂಗ್ ತಮ್ಮ ಹೇಳಿಕೆಯನ್ನು ಸಿಬಿಐ ವಿಶೇಷ ನ್ಯಾಯಾಧೀಶರ ಮುಂದೆ ದಾಖಲಿಸಲು ಇಂದು ನ್ಯಾಯಾಲಯಕ್ಕೆ ಹಾಜರಾದರು.
ಸಿಬಿಐ ನ್ಯಾಯಾಲಯ ಪ್ರಸ್ತುತ 32 ಮಂದಿ ಆರೋಪಿಗಳ ಹೇಳಿಕೆಯನ್ನು ದಾಖಲಿಸಿಕೊಂಡಿದೆ.
ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ ಹಾಗೂ ಬಿಜೆಪಿಯ ಹಿರಿಯ ನಾಯಕ ಎಂ.ಎಂ. ಜೋಷಿ ಸೇರಿದಂತೆ ಇತರ ಆರೋಪಿಗಳ ಹೇಳಿಕೆಗಳನ್ನು ಇನ್ನಷ್ಟೆ ದಾಖಲಿಸಿಕೊಳ್ಳಬೇಕಾಗಿದೆ.
ಈ ಆರೋಪಿಗಳು ವೀಡಿಯೊ ಕಾನ್ಫೆರನ್ಸ್ ಮೂಲಕ ನಡೆಯುವ ವಿಚಾರಣೆಗೆ ಆದ್ಯತೆ ನೀಡುತ್ತಾರೆ ಎಂದು ಆರೋಪಿಗಳ ಪರ ವಕೀಲರು ಸಿಬಿಐ ನ್ಯಾಯಾಲಯಕ್ಕೆ ತಿಳಿಸಿದರು.
ಈ ಪ್ರಕರಣದ ಇನ್ನೋರ್ವ ಆರೋಪಿ ರಾಮ ಚಂದ್ರ ಖತ್ರಿ ಪ್ರಕರಣವೊಂದಕ್ಕೆ ಸಂಬಂಧಿಸಿ ಹರ್ಯಾಣದ ಸೋನಿಪತ್ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದಾರೆ. ಆತನ ಹೇಳಿಕೆಯನ್ನು ವೀಡಿಯೊ ಕಾನ್ಫರೆನ್ಸ್ ಮೂಲಕ ದಾಖಲಿಸಲು ವ್ಯವಸ್ಥೆ ಮಾಡುವಂತೆ ರಾಷ್ಟ್ರೀಯ ಮಾಹಿತಿ ಕೇಂದ್ರಕ್ಕೆ ಜ್ಞಾಪನಾ ಪತ್ರ ಕಳುಹಿಸಬೇಕು ಎಂದು ವಿಶೇಷ ನ್ಯಾಯಾಲಯ ಕಳೆದ ವಾರ ಪುನರುಚ್ಚರಿಸಿತ್ತು.