ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಶಿಫಾರಸು
ಪಾಟ್ನಾ, ಆ. 4: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ಪ್ರಕರಣವನ್ನು ಬಿಹಾರ ಸರಕಾರ ಮಂಗಳವಾರ ಸಿಬಿಐ ತನಿಖೆಗೆ ಶಿಫಾರಸು ಮಾಡಿದೆ.
ರಜಪೂತ್ ಅವರ ತಂದೆ ರಾಜ್ಯ ಪೊಲೀಸ್ ವರಿಷ್ಠರನ್ನು ಭೇಟಿಯಾದ ಬಳಿಕ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ.
ಡಿಜಿಪಿ ಅವರು ಸುಶಾಂತ್ ಸಿಂಗ್ ತಂದೆಯೊಂದಿಗೆ ಇಂದು ಬೆಳಗ್ಗೆ ಮಾತುಕತೆ ನಡೆಸಿದ್ದಾರೆ. ಅವರು ಸಿಬಿಐ ತನಿಖೆಗೆ ಒಪ್ಪಿಗೆ ನೀಡಿದ್ದಾರೆ. ಆದುದರಿಂದ ಈಗ ನಾವು ಈ ಪ್ರಕರಣವನ್ನು ಸಿಬಿಐ ತನಿಖೆಗೆ ಶಿಫಾರಸು ಮಾಡಿದ್ದೇವೆ ಎಂದು ನಿತೀಶ್ ಕುಮಾರ್ ಹೇಳಿದ್ದಾರೆ.
ರಜಪೂತ್ ಅವರ ತಂದೆ ಕೆ.ಕೆ. ಸಿಂಗ್ ಅವರು ನಿತೀಶ್ ಕುಮಾರ್ ಅವರನ್ನು ಕೂಡ ಭೇಟಿಯಾಗಿ ಪ್ರಕರಣದ ತನಿಖೆಯನ್ನು ಸಿಬಿಐಗೆ ಶಿಫಾರಸು ಮಾಡುವಂತೆ ಕೋರಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಬಾಂಬೆ ಉಚ್ಚ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ದಾವೆಯನ್ನು ಕೂಡ ಸಲ್ಲಿಸಿದ್ದರು. ಅದರ ವಿಚಾರಣೆ ಮಂಗಳವಾರ ನಡೆಯಬೇಕಿತ್ತು. ಆದರೆ, ಮುಂಬೈಯಲ್ಲಿ ಭಾರೀ ಮಳೆ ಸುರಿಯುತ್ತಿರುವ ಮುಂದೂಡಲಾಗಿದೆ.