ಬಿಹಾರ,ಮಹಾರಾಷ್ಟ್ರದಲ್ಲಿ ಪ್ರವಾಹ ಪರಿಸ್ಥಿತಿ: ಎನ್ಡಿಆರ್ಎಫ್ ನಿಯೋಜನೆ
ಹೊಸದಿಲ್ಲಿ, ಆ.6:ಬಿಹಾರ ಹಾಗೂ ಮಹಾರಾಷ್ಟ್ರದ ರಾಜಧಾನಿ ಮುಂಬೈನಲ್ಲಿ ಭಾರೀ ಮಳೆಯಾಗುತ್ತಿದ್ದು, ಪ್ರವಾಹದ ಪರಿಸ್ಥಿತಿ ಉಂಟಾಗಿದೆ. ನಿರಂತರವಾಗಿ ಮಳೆಯು ಜಾಸ್ತಿಯಾಗುತ್ತಲೇ ಇರುವುದರಿಂದ ಪರಿಸ್ಥಿತಿಯನ್ನು ನಿಭಾಯಿಸಲು ಎರಡೂ ಕಡೆಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ(ಎನ್ಡಿಆರ್ಎಫ್)ತಂಡಗಳನ್ನು ನಿಯೋಜಿಸಲಾಗಿದೆ.
ಬಿಹಾರದ ಅನೇಕ ಜಿಲ್ಲೆಗಳಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿಯನ್ನು ನಿಭಾಯಿಸಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಹಾಗೂ ಎಸ್ಡಿಆರ್ಎಫ್ ಸೇರಿದಂತೆ 30ಕ್ಕೂ ಅಧಿಕ ತಂಡಗಳನ್ನು ನಿಯೋಜಿಸಲಾಗಿದೆ ಎಂದು ರಾಜ್ಯ ಸರಕಾರದ ವಿಪತ್ತು ನಿರ್ವಹಣಾ ವಿಭಾಗ ತಿಳಿಸಿದೆ.
ಇನ್ನೊಂದೆಡೆ ಮಹಾರಾಷ್ಟ್ರದಲ್ಲಿ ಮಳೆ ಹೆಚ್ಚಾಗುತ್ತಿದ್ದು, ಪ್ರವಾಹ ಪರಿಸ್ಥಿತಿ ನಿಭಾಯಿಸಲು ಮುನ್ನೆಚ್ಚರಿಕಾ ಕ್ರಮವಾಗಿ 16 ಎನ್ಡಿಆರ್ಎಫ್ ಪಡೆ ನಿಯೋಜಿಸಲಾಗಿದೆ. ಮುಂಬೈನಲ್ಲಿ 5, ಕೊಲ್ಹಾಪುರ 4, ಸಾಂಗ್ಲಿ 2, ಸತಾರ, ಥಾಣೆ, ಪಾಲ್ಗರ್, ನಾಗಪುರ ಹಾಗೂ ರಾಯಗಢದಲ್ಲಿ ತಲಾ ಒಂದು ತಂಡವನ್ನು ನಿಯೋಜಿಸಲಾಗಿದೆ. ನಿರಂತರವಾಗಿ ಮಳೆಯಿಂದಾಗಿ ಮಹಾರಾಷ್ಟ್ರದ ವಿವಿಧ ಭಾಗಗಳಲ್ಲಿ ಜಲಾವೃತವಾಗಿದ್ದು, ಪ್ರವಾಹದ ಪರಿಸ್ಥಿತಿ ಎದುರಾಗಿದೆ.