ಮುಂಬೈನಲ್ಲಿ ಮುಂದುವರಿದ ವೈದ್ಯರ ಮುಷ್ಕರ, ರೋಗಿಗಳ ಪರದಾಟ
ಮುಂಬೈ, ಮಾ.23: ಸ್ಥಾನೀಯ ವೈದ್ಯರು ಗುರುವಾರವೂ ತಮ್ಮ ಮುಷ್ಕರವನ್ನು ಮುಂದುವರಿಸಿದ ಹಿನ್ನೆಲೆಯಲ್ಲಿ ಸಾವಿರಾರು ರೋಗಿಗಳು ಸಯನ್ನ ಆಸ್ಪತ್ರೆಗೆ ಹೊರಗೆ ಪರದಾಟ ನಡೆಸುತ್ತಿದ್ದಾರೆ.
ಬುಧವಾರ ರಾತ್ರಿ ಸಯನ್ ಆಸ್ಪತ್ರೆಯ ವೈದ್ಯರ ಮೇಲೆ ರೋಗಿಯ ಸಂಬಂಧಿಕನೊಬ್ಬ ಹಲ್ಲೆ ನಡೆಸಿದ್ದು, ಈ ಹಿನ್ನೆಲೆಯಲ್ಲಿ ಸ್ಥಾನೀಯ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಘಟನೆಗೆ ಸಂಬಂಧಿಸಿ ಪೊಲೀಸರು ಮೂವರು ಮಹಿಳೆಯರ ವಿರುದ್ಧ ದೂರು ದಾಖಲಿಸಿದ್ದಾರೆ.
ಸರಕಾರಿ ಆಸ್ಪತ್ರೆಗಳಲ್ಲಿ ವೈದ್ಯರಿಗೆ ಭದ್ರತೆಯ ಕೊರತೆಯನ್ನು ಪ್ರತಿಭಟಿಸಿ ಮಹಾರಾಷ್ಟ್ರದಾದ್ಯಂತ 40,000ಕ್ಕೂ ಅಧಿಕ ವೈದ್ಯರು ಬುಧವಾರದಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದರು.
‘‘ನಮ್ಮ ಬೇಡಿಕೆಯನ್ನು ನಿರ್ಲಕ್ಷಿಸುತ್ತಿರುವ ಮಹಾರಾಷ್ಟ್ರ ಸರಕಾರದ ವಿರುದ್ಧ ನಾವು ಪ್ರತಿಭಟನೆ ನಡೆಸುತ್ತಿದ್ದೇವೆ. ಎಲ್ಲ ಸರಕಾರಿ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರಿಗೆ ಭದ್ರತಾ ಸಿಬ್ಬಂದಿಯನ್ನು ತಕ್ಷಣವೇ ನಿಯೋಜಿಸಬೇಕು. ರೋಗಿಯ ಸಂಬಂಧಿಕರಲ್ಲಿ ಇಬ್ಬರಿಗೆ ಮಾತ್ರ ಆಸ್ಪತ್ರೆಯೊಳಗೆ ಪ್ರವೇಶ ನೀಡಬೇಕು ಎಂದು ಆಗ್ರಹಿಸಲಾಗಿದೆ. ಸರಕಾರ ನಮ್ಮ ಬೇಡಿಕೆಯನ್ನು ಜಾರಿಗೆ ತರದೇ ನಮಗೆ ಎಚ್ಚರಿಕೆ ನೀಡುತ್ತಿದೆ. ಭಾರತೀಯ ವೈದ್ಯಕೀಯ ಸಂಸ್ಥೆ ಕೂಡ ಸ್ಥಾನೀಯ ವೈದ್ಯರಿಗೆ ಬೆಂಬಲ ವ್ಯಕ್ತಪಡಿಸಿದ್ದು, ನಮ್ಮ ಮುಷ್ಕರ ಮುಂದುವರಿಯಲಿದೆ’ ಎಂದು ಡಾ. ಸಾಗರ್ ಮುಂಡಾಡ ಹೇಳಿದ್ದಾರೆ.