ನಿತೀಶ್ ಕುಮಾರ್ ವಿಧಾನ ಪರಿಷತ್ ಸದಸ್ಯತ್ವ ರದ್ದು ವಿಚಾರ: ಮನವಿ ವಿಚಾರಣೆಗೆ ಸುಪ್ರೀಂ ಒಪ್ಪಿಗೆ
ಹೊಸದಿಲ್ಲಿ, ಆ. 1: ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಮರೆಮಾಚಿರುವ ಹಿನ್ನೆಲೆಯಲ್ಲಿ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ರಾಜ್ಯ ವಿಧಾನ ಪರಿಷತ್ನ ಸದಸ್ಯತ್ವ ರದ್ದುಗೊಳಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಮನವಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸೋಮವಾರ ಒಪ್ಪಿಕೊಂಡಿದೆ.
ದೂರುದಾರ ವಕೀಲ ಎಂ.ಎಲ್. ಶರ್ಮಾ ಮನವಿಯನ್ನು ತುರ್ತಾಗಿ ವಿಚಾರಣೆ ನಡೆಸುವಂತೆ ಕೋರಿದ ಬಳಿಕ ಪರಿಗಣನೆಗೆ ನಿರ್ಧರಿಸಿದೆ ಎಂದು ನ್ಯಾಯಮೂರ್ತಿ ದೀಪಕ್ ಮಿಶ್ರಾ, ಅಮಿತ್ವಾ ರಾಯ್ ಹಾಗೂ ಎ.ಎಂ. ಖಾನ್ವಿಲ್ಕರ್ ಅವರನ್ನು ಒಳಗೊಂಡ ನ್ಯಾಯಪೀಠ ಹೇಳಿದೆ.
ನಿತೀಶ್ ಕುಮಾರ್ ವಿರುದ್ಧ ಶರ್ಮಾ ಸಲ್ಲಿಸಿದ ದೂರಿನಲ್ಲಿ, 1991ರಲ್ಲಿ ಬಾರಾಹ್ ಕ್ಷೇತ್ರಕ್ಕೆ ನಡೆದ ಲೋಕಸಭಾ ಉಪ ಚುನಾವಣೆ ಸಂದರ್ಭ ನಿತೀಶ್ ಕುಮಾರ್ ಸ್ಥಳೀಯ ಕಾಂಗ್ರೆಸ್ ನಾಯಕ ಸೀತಾರಾಮ್ ಸಿಂಗ್ ಹತ್ಯೆ ಹಾಗೂ ಇತರ ನಾಲ್ವರಿಗೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಲಾಗಿದೆ.
ನಿತೀಶ್ ಕುಮಾರ್ ವಿರುದ್ಧ ಪ್ರಥಮ ಮಾಹಿತಿ ವರದಿ ದಾಖಲಿಸಿ ಸಿಬಿಐ ತನಿಖೆ ನಡೆಸಬೇಕು ಎಂದು ಕೂಡ ಈ ದೂರಿನಲ್ಲಿ ಶರ್ಮಾ ಸುಪ್ರೀಂ ಕೋಟ್ನಲ್ಲಿ ಮನವಿ ಮಾಡಿದ್ದಾರೆ.