ತನಿಖೆ ಹಳ್ಳ ಹಿಡಿದಿರುವುದೇಕೆ..?
ಮಾನ್ಯರೆ,
ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ನಡೆದ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನದ ಯೋಜನೆಯಲ್ಲಿ ಸಾಕಷ್ಟು ಅಕ್ರಮಗಳಾಗಿರುವ ಬಗ್ಗೆ ಆರೋಪಗಳು ಕೇಳಿಬಂದಿತ್ತು. 1,907 ಕೋಟಿ ರೂ. ಬೃಹತ್ ಯೋಜನೆಯಲ್ಲಿ ರಾಜ್ಯದಲ್ಲಿನ ಸರಕಾರಿ ಶಾಲೆಗಳ ಕಟ್ಟಡ ನಿರ್ಮಾಣದ ಕಾಮಗಾರಿ ಕೈಗೆತ್ತಿಕೊಳ್ಳಲಾಗಿತ್ತು.
1, 907 ಕೋಟಿ ರೂ. ಮೊತ್ತದ ಯೋಜನೆಯಲ್ಲಿ ಅಕ್ರಮ ನಡೆದು 4 ವರ್ಷಗಳೇ ಕಳೆದಿವೆ. ಆದರೆ ತನಿಖೆ ಮಾತ್ರ ನಿಧಾನಗತಿಯಲ್ಲಿ ನಡೆಯುತ್ತಿದೆ. ಹೀಗಾಗಿ ತಪ್ಪಿತಸ್ಥರಿಗೆ ಶಿಕ್ಷೆಯೇ ಆಗಿಲ್ಲ.
ರಾಜ್ಯ ಸರಕಾರ ಉನ್ನತ ಮಟ್ಟದ ಸಮಿತಿಯ ತನಿಖೆಗೆ ಆದೇಶಿಸಿದ್ದರೂ ಆದೇಶ ಪಾಲನೆಯಾಗುತ್ತಿಲ್ಲ. ಈ ಹಿಂದೆ ಲೋಕಾಯುಕ್ತ ತನಿಖೆಗೆ ಶಿಕ್ಷಣ ಸಚಿವರು ಆದೇಶಿಸಿದ್ದರು. ಆದರೆ ತನಿಖೆ ಮಾತ್ರ ಪೂರ್ಣಗೊಂಡಿಲ್ಲ. ಹಾಗಾದರೆ ಈ ಯೋಜನೆಗೆ ಕೇಂದ್ರ ಸರಕಾರ ಮಂಜೂರು ಮಾಡಿದ್ದ 707 ಕೋಟಿ ರೂ. ಹಾಗೂ ರಾಜ್ಯ ಸರಕಾರ ಬಿಡುಗಡೆ ಮಾಡಿದ್ದ 641 ಕೋಟಿ ರೂ. ಏನಾಯಿತು?. ಅದಲ್ಲದೆ ಕಾನೂನು ಬಾಹಿರವಾಗಿ 19 ಸಂಸ್ಥೆಗಳೊಂದಿಗೆ ಒಪ್ಪಂದ ಮಾಡಿಕೊಂಡದ್ದರ ಬಗ್ಗೆ ಕೂಡಾ ತನಿಖೆ ಮಾಡಬೇಕು. ಅಲ್ಲದೆ ಕೂಡಲೇ ಗುತ್ತಿಗೆದಾರರಿಗೆ ಬಾಕಿ ಇರುವ 199 ಕೋಟಿ ರೂ. ನೀಡಬೇಕಾಗಿದೆ. ಕೂಡಲೇ ಈ ಯೋಜನೆ ಬಗ್ಗೆ ರಾಜ್ಯ ಸರಕಾರ ವರದಿ ತರಿಸಿ ಅಕ್ರಮ ನಡೆಸಿದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕಾಗಿದೆ.