ರಾಜ್ಯಕ್ಕೆ ಹಸಿರು ಹೊದಿಕೆ ನಮ್ಮ ಗುರಿ: ಅರಣ್ಯ ಸಚಿವ ಆರ್.ಶಂಕರ್
ಬೆಂಗಳೂರು, ಜೂ. 22: ರಾಜ್ಯದ ಅರಣ್ಯ ಪ್ರದೇಶವನ್ನು ಹೆಚ್ಚಿಸಲು ಹಸಿರು ಹೊದಿಕೆ ಆಂದೋಲನವನ್ನು ಕೈಗೊಳ್ಳಲಾಗುವುದು ಎಂದು ಅರಣ್ಯ ಮತ್ತು ಪರಿಸರ ಖಾತೆ ಸಚಿವ ಆರ್.ಶಂಕರ್ ತಿಳಿಸಿದ್ದಾರೆ.
ಶುಕ್ರವಾರ ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಪೂಜೆ ನೆರವೇರಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿನ ಪ್ರತಿಯೊಬ್ಬ ವ್ಯಕ್ತಿಯೂ ಮರ ಬೆಳೆಸುವ ಮೂಲಕ ಹಸಿರೀಕರಣಕ್ಕೆ ಸರಕಾರದೊಂದಿಗೆ ಕೈಜೋಡಿಸಬೇಕು ಎಂದು ಕೋರಿದರು.
ಉತ್ತರ ಕರ್ನಾಟಕ ಭಾಗದಲ್ಲಿ ಬೃಹತ್ ಮೃಗಾಲಯ ಸ್ಥಾಪಿಸುವ ಚಿಂತನೆ ಇದೆ. ಹಾವೇರಿ ಜಿಲ್ಲೆ ರಾಣೆಬೆನ್ನೂರಿನ ಕೃಷ್ಣಮೃಗ ಸಂರಕ್ಷಿತ ಅರಣ್ಯದ ಬಳಿ ಮಂಗಳೂರಿನ ಪಿಲಿಕುಳ ನಿಸರ್ಗಧಾಮದ ಮಾದರಿಯಲ್ಲಿ ಅರಣ್ಯಧಾಮ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ಅವರು ತಿಳಿಸಿದರು.
ಅರಣ್ಯ ಮತ್ತು ಪರಿಸರ ನಾಶ ಮಾಡುವ ಕಾರ್ಖಾನೆಗಳ ವಿರುದ್ದ ಕಠಿಣ ಕ್ರಮ ತೆಗೆದುಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ವನ್ಯಜೀವಿ ಸಂರಕ್ಷಣಾಲಯ ಕುರಿತಂತೆ ಪರಿಸರವಾದಿಗಳು, ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಹೇಳಿದರು.