ಮಾಜಿ ಸಿಎಂ ಸಿದ್ದರಾಮಯ್ಯ ಉತ್ತರ ಕುಮಾರ: ಈಶ್ವರಪ್ಪ ಲೇವಡಿ
ಕಲಬುರಗಿ, ಜು. 15: ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ‘ಉತ್ತರ ಕುಮಾರ’ ನಂತೆ ಸರಕಾರಕ್ಕೆ ಪತ್ರ ಬರೆಯುವುದನ್ನು ಬಿಟ್ಟು ಮೊದಲು ರಾಜೀನಾಮೆ ನೀಡಲಿ ಎಂದು ಬಿಜೆಪಿ ಮುಖಂಡ ಹಾಗೂ ಶಾಸಕ ಕೆ.ಎಸ್.ಈಶ್ವರಪ್ಪ ಲೇವಡಿ ಮಾಡಿದ್ದಾರೆ.
ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಸರಕಾರದ ಯೋಜನೆ ಮುಂದುವರಿಕೆ ಕುರಿತಂತೆ ಸಿಎಂ ಕುಮಾರಸ್ವಾಮಿಗೆ ಸಿದ್ದರಾಮಯ್ಯ ಪತ್ರ ಬರೆಯುವುದನ್ನು ನಿಲ್ಲಿಸಿ ಮೊದಲು ಸಮನ್ವಯ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದರು.
ಕಾಂಗ್ರೆಸ್-ಜೆಡಿಎಸ್ ಒಗ್ಗೂಡಿ ಬಿಜೆಪಿ ವಿರುದ್ಧ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿ. ನಾವು ಅವರನ್ನು ಎದುರಿಸಲು ಸಿದ್ಧರಾಗಿದ್ದೇವೆ ಎಂದ ಈಶ್ವರಪ್ಪ, ರಾಜ್ಯದ ಲೋಕಸಭಾ ಚುನಾವಣೆಯಲ್ಲಿ 25 ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನಾಯಕತ್ವಕ್ಕೆ ನಮ್ಮ ಅಭ್ಯಂತರವಿಲ್ಲ ಎಂದು ಹೇಳುವ ಮೂಲಕ ದೇವೇಗೌಡ ಜೆಡಿಎಸ್ ಕಾಂಗ್ರೆಸ್ಗೆ ಸಂರ್ಪೂಣ ಶರಣಾಗಿದೆ. ಅದೇ ರೀತಿಯಲ್ಲಿ ಕಾಂಗ್ರೆಸ್ ಕೂಟ ಜೆಡಿಎಸ್ಗೆ ಶರಣಾಗಿದೆ. ಸಿಎಂ ಕುಮಾರಸ್ವಾಮಿ, ರಾಹುಲ್ ಗಾಂಧಿಗೆ ಪುಣ್ಯಾತ್ಮ ಎಂದು ಕರೆದು ಅವರ ಋಣ ಹೇಗೆ ತೀರಿಸಲಿ ಎಂದಿದ್ದಾರೆ. ಪುಣ್ಯಾತ್ಮನೋ-ಪಾಪಾತ್ಮನೋ ಎಂಬುದನ್ನು ಜನ ತೀರ್ಮಾನಿಸಲಿದ್ದಾರೆ ಎಂದು ಹೇಳಿದರು.