ಮಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ
ಮಂಗಳೂರು, ಸೆ.7: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಉಡುಪಿ ಮತ್ತು ದ.ಕ. ಜಿಲ್ಲೆಗಳ ಪ್ರವಾಸಕ್ಕಾಗಿ ಇಂದು ಬೆಳಗ್ಗೆ ಮಂಗಳೂರಿಗೆ ಆಗಮಿಸಿದ್ದಾರೆ.
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಮುಖ್ಯಮಂತ್ರಿ, ಪೊಲೀಸ್ ಗೌರವ ರಕ್ಷೆ ಸ್ವೀಕರಿಸಿ ನೇರವಾಗಿ ಅಲ್ಲಿಂದಲೇ ಕಾರಿನಲ್ಲಿ ಉಡುಪಿಯತ್ತ ಪ್ರಯಾಣ ಬೆಳೆಸಿದರು.
ಈ ಸಂದರ್ಭ ಮಾಧ್ಯಮದವರ ಜೊತೆ ಮಾತನಾಡಲು ನಿರಾಕರಿಸಿದ ಮುಖ್ಯಮಂತ್ರಿ, ಏನಿದ್ದರೂ ಸಂಜೆ ಮಂಗಳೂರಿಗೆ ಹಿಂದಿರುಗಿ ಮಾತನಾಡುವುದಾಗಿ ತಿಳಿಸಿದರು.
ಮುಖ್ಯಮಂತ್ರಿಯವರು ಮಣಿಪಾಲಕ್ಕೆ ಉಡುಪಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಉಪಸ್ಥಿತಿಯಲ್ಲಿ ಪ್ರಗತಿ ಪರಿಶೀಲನೆ ನಡೆಸುವರು. ಅಪರಾಹ್ನ 3ಕ್ಕೆ ಮತ್ತೆ ಮಂಗಳೂರಿಗೆ ಹಿಂದಿರುಗಿ ಇಲ್ಲಿಯೂ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸುವರು.
ಮುಖ್ಯಮಂತ್ರಿಯನ್ನು ದ.ಕ. ಜಿಲ್ಲಾ ಜೆಡಿಎಸ್ ಅಧ್ಯಕ್ಷ ಮುಹಮ್ಮದ್ ಕುಂಞಿ ವಿಟ್ಲ, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ, ಹರೀಶ್ ಕುಮಾರ್, ಭೋಜೇಗೌಡ, ಬಿ.ಎಂ.ಫಾರೂಕ್, ಮನಪಾ ಮೇಯರ್ ಭಾಸ್ಕರ ಮೊಯ್ಲಿ, ಮಾಜಿ ಸಚಿವ ಕೆ.ಅಭಯಚಂದ್ರ ಜೈನ್, ಮಾಜಿ ಶಾಸಕ ಬಿ.ಎ.ಮೊಯ್ದಿನ್ ಬಾವ, ಎಂ.ಬಿ.ಸದಾಶಿವ, ಶಶಿಧರ ಹೆಗ್ಡೆ, ಅಕ್ಷಿತ್ ಸುವರ್ಣ, ವಸಂತ ಪೂಜಾರಿ ಮೊದಲಾದವರು ಸ್ವಾಗತಿಸಿದರು.