ಹನೂರು: ಕಾನೂನು ಅರಿವು ಕಾರ್ಯಕ್ರಮ
ಹನೂರು,ಸೆ.7: ಕಾನೂನಿನ ಬಗ್ಗೆ ಸೂಕ್ತ ತಿಳುವಳಿಕೆ ಹೊಂದುವುದರ ಮೂಲಕ ಸುವ್ಯವಸ್ಥಿತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಹಿರಿಯ ವಕೀಲ ಶಿವಸ್ವಾಮಿ ತಿಳಿಸಿದರು.
ಹನೂರು ಸಮೀಪದ ರಾಮಾಪುರ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಅಭಿಯೋಜನಾ ಹಾಗೂ ಸರ್ಕಾರಿ ಇಲಾಖೆಗಳ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಗ್ರಾಮೀಣ ಪ್ರದೇಶದಲ್ಲಿನ ಹೆಚ್ಚಿನ ಜನರು ಕಾನೂನಿನ ಬಗ್ಗೆ ಸೂಕ್ತ ತಿಳಿವಳಿಕೆ ಹೊಂದಿರುವುದಿಲ್ಲ. ಈ ದಿಸೆಯಲ್ಲಿ ನ್ಯಾಯಾಲಯ ಗ್ರಾಮೀಣ ಪ್ರದೇಶಗಳಲ್ಲಿನ ಜನರಿಗಾಗಿ ಕಾನೂನು ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಆದ್ದರಿಂದ ಇಲ್ಲಿ ಸಿಗುವ ಮಾಹಿತಿಗಳನ್ನು ಪಡೆದು ಕಾನೂನು ಚೌಕಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು. ಜತೆಗೆ ವಿದ್ಯಾರ್ಥಿಗಳು ಈ ಬಗ್ಗೆ ತಿಳಿದು ಪಾಲಕರಿಗೆ ಕಾನೂನು ನೀತಿ ನಿಯಮಗಳ ಬಗ್ಗೆ ತಿಳಿಸಬೇಕು ಎಂದು ತಿಳಿಸಿದರು.
ಇದೇ ವೇಳೆ ವಿವಿಧ ಇಲಾಖೆಯಲ್ಲಿ ದೊರಕುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಲಾಯಿತು. ಈ ಸಂದರ್ಭ ಸರ್ಕಾರಿ ಸಹಾಯಕ ಅಭಿಯೋಜಕ ಎಂ. ನಾಗೇಶ್, ಹಿರಿಯ ವಕೀಲ ಮಲ್ಲಿಕಾರ್ಜುನ, ಗ್ರಾಪಂ ಅಧ್ಯಕ್ಷೆ ನಲ್ಲಮ್ಮ, ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು.