ಪ್ರಧಾನ ಮಂತ್ರಿ ಕೃಷಿ ಸಿಂಚಯಿ ಯೋಜನೆಯಡಿ 5,987.39 ಕೋಟಿ ರೂ.ಗಳ ನೀರಾವರಿ ಯೋಜನೆಗೆ ಒಪ್ಪಿಗೆ
ಮಂಗಳೂರು, ಆ.23: ‘ನೀರಿನ ಪ್ರತಿ ಹನಿ ಹನಿಯ ಮಹತ್ವ’ಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ಘೋಷಿಸಲಾಗಿರುವ ಕೇಂದ್ರ ಸರಕಾರದಿಂದ ಪ್ರಧಾನ ಮಂತ್ರಿ ಕೃಷಿ ಸಿಂಚಯಿ ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದಲ್ಲಿ 5987.39 ಕೋ. ರೂ.ಗಳ ನೀರಾವರಿ ಯೋಜನೆಗೆ ಇಂದು ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಯಿತು.
ಪ್ರಧಾನ ಮಂತ್ರಿ ಕೃಷಿ ಸಿಂಚಯಿ ಯೋಜನೆಯಡಿ ಜಿಲ್ಲಾ ಮಟ್ಟದಲ್ಲಿ ನೀರಾವರಿಗೆ ಸಂಬಂಧಪಟ್ಟಂತೆ ಎಲ್ಲಾ ಯೋಜನೆಗಳನ್ನು ಒಗ್ಗೂಡಿಸುವುದು, ನೀರಿನ ಸಂರಕ್ಷಣೆ ಹಾಗೂ ಅಂತರ್ಜಲ ಮಟ್ಟ ಹೆಚ್ಚಿಸುವುದು, ಜಲಾನಯನ ಕಾರ್ಯಕ್ರಮಗಳ ಮೂಲಕ ಮಳೆ ನೀರಿನ ಸಂರಕ್ಷಣೆ, ತ್ಯಾಜ್ಯ ನೀರು ಶುದ್ಧೀಕರಿಸುವ ಸಂಸ್ಕರಣಾ ಘಟಕಗಳ ಮೂಲಕ ಪಟ್ಟಣ ಪ್ರದೇಶದ ಕೃಷಿಗೆ ನೀರು ಬಳಕೆ ಹಾಗೂ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಈ ಯೋಜನೆಯದ್ದಾಗಿದೆ.
ಅದರಂತೆ ಜಿಲ್ಲೆಯಲ್ಲಿ ಕೃಷಿ ಇಲಾಖೆ, ತೋಟಗಾರಿಕಾ ಇಲಾಖೆ, ಅರಣ್ಯ ಇಲಾಖೆ, ಕೈಗಾರಿಕೆಗಳು ಸೇರಿದಂತೆ ವಿವಿಧ ಇಲಾಖೆಗಳಡಿ ಐದು ವರ್ಷಗಳ ಅವಧಿಯಲ್ಲಿ ಒಟ್ಟು 208791 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಇದರಿಂದ ಒಟ್ಟು 1.08176 ಬಿಲಿಯನ್ ಕ್ಯೂಬಿಕ್ ಮೀಟರ್ ನೀರು ಹೆಚ್ಚಳವಾಗಲಿದೆ ಎಂದು ಎಂದು ಕೃಷಿ ಇಲಾಖೆಯ ಉಪ ನಿರ್ದೇಶಕ ಕೆಂಪೇಗೌಡ ಮಾಹಿತಿ ನೀಡಿದರು.