ಸರಕಾರಿ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರ

ಮಂಗಳೂರು, ಆ. 24: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ದಕ್ಷಿಣ ಕನ್ನಡ ಜಿಲ್ಲಾ ಶಾಖೆ ವತಿಯಿಂದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ರಾಜ್ಯ ಸರಕಾರಿ ನೌಕರರ ಎಸೆಸೆಲ್ಸಿ ಮತ್ತು ಪಿ.ಯು.ಸಿ ಮಕ್ಕಳ ಪ್ರತಿಭಾ ಪುರಸ್ಕಾರ ರವಿವಾರ ನಡೆಯಿತು.
ದಕ್ಷಿಣ ಕನ್ನಡ ಜಿಲ್ಲೆಯ 133 ಎಸೆಸೆಲ್ಸಿ, 102 ಪಿಯುಸಿ ವಿದ್ಯಾರ್ಥಿಗಳಿಗೆ, ಉಡುಪಿ ಜಿಲ್ಲೆಯ 115 ಮಂದಿ ಎಸೆಸೆಲ್ಸಿ ಮತ್ತು 88 ಮಂದಿ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ಪ್ರತಿಭಾ ಪುರಸ್ಕಾರ ಜತೆ ಸಂಘಧ ಪದಾಧಿಕಾರಿಗಳು ಹಾಗೂ ನಿರ್ದೇಶಕರಿಗೆ ಸನ್ಮಾನ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಸಂಸದ ಕ್ಯಾ. ಬ್ರಿಜೇಶ್ ಚೌಟ, ಸರಕಾರಿ ಯೋಜನೆ, ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವ ಮಹತ್ಕಾರ್ಯವನ್ನು ಸರಕಾರಿ ನೌಕರರು ನಿರ್ವಹಿಸುತ್ತಿದ್ದಾರೆ ಎಂದರು.
ದಕ್ಷಿಣ ಕನ್ನಡ ಜಿಲ್ಲೆ ಸಾಧ್ಯತೆಗಳ ಸಾಗರವಾಗಿ ಬೆಳೆಯುತ್ತಿದೆ. ಭವಿಷ್ಯವನ್ನು ನಿರ್ಮಾಣ ಮಾಡುವ ವಿದ್ಯಾರ್ಥಿಗಳಿಗೆ ವಿಶ್ವಾಸ ತುಂಬಿಸುವ ಕೆಲಸವನ್ನು ಸಂಘದಿಂದ ಮಾಡಲಾಗುತ್ತಿದೆ. ಪ್ರಧಾನ ಮಂತ್ರಿಗಳ ವಿಕಸಿತ ಭಾರತದ ಕಲ್ಪನೆಯನ್ನು ನನಸಾಗಿಸಲು ಶಕ್ತಿ ತುಂಬಿಸುವ ಕೆಲಸ ಮಾಡೋಣ ಎಂದು ತಿಳಿಸಿದರು.
ಶಾಸಕ ಡಿ. ವೇದವ್ಯಾಸ ಕಾಮತ್ ಮಾತನಾಡಿ, ವಿದ್ಯಾರ್ಥಿಗಳು, ಸರಕಾರಿ ನೌಕರರು ಸಮಾಜಕ್ಕೆ ಕೊಡುಗೆ ನೀಡುವ ದೇಶಾಭಿಮಾನಿಗಳಾಗಿ ಹೊರಹೊಮ್ಮಬೇಕು. ಸರಕಾರಿ ನೌಕರರ ಬೇಡಿಕೆಗಳ ಈಡೇರಿಸಲು ಶಾಸಕನಾಗಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿದರು.
ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಅಧ್ಯಕ್ಷತೆ ವಹಿಸಿ ಮಾತನಾಡಿ ದರು. ಆಯ್ಕೆಯಾದ ಪ್ರತಿಭಾವಂತ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಪುರಸ್ಕರಿಸಲಾಯಿತು. ಕಾರ್ಯಕ್ರಮದಲ್ಲಿ ಉಪನ್ಯಾಸಕಿ ಅಕ್ಷಯ ಗೋಖಲೆ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಎಸ್. ಬಸವರಾಜ್, ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ನವೀನ್ ಕುಮಾರ್ ಎಂ.ಎಸ್., ಉಡುಪಿ ಜಿಲ್ಲಾಧ್ಯಕ್ಷ ಕೆ. ದಿನಕರ ಶೆಟ್ಟಿ, ರಾಜ್ಯ ಸಂಘಟದ ಪ್ರಧಾನ ಕಾರ್ಯದರ್ಶಿ ಗಿರಿ ಗೌಡ ಎಚ್. ಮೊದಲಾದವರು ಉಪಸ್ಥಿತರಿದ್ದರು.







