ಮುಲ್ಕಿ: ಬಿಲ್ಲವ ಸಮಾಜ ಸೇವಾ ಸಂಘದ ವತಿಯಿಂದ ವಿದ್ಯಾರ್ಥಿವೇತನ ವಿತರಣಾ ಸಮಾರಂಭ

ಮುಲ್ಕಿ: ಸಮಾಜದ ಎಲ್ಲಾ ವರ್ಗಗಳಲ್ಲಿಯೂ ಸೌಹಾರ್ದದ ಸಂದೇಶ ನೀಡಿದ ನಾರಾಯಣಗುರುಗಳು ಸಮಾನತೆ ಮತ್ತು ಮಾನವೀತಯತೆಯ ಹರಿಕಾರರು ಎಂದು ಕರ್ನಾಟಕ ವಿಧಾನಸಭೆಯ ಸಭಾಪತಿ ಯು.ಟಿ. ಖಾದರ್ ಹೇಳಿದ್ದಾರೆ.
ಅವರು ಮುಲ್ಕಿಯ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ಶನಿವಾರ ನಡೆದ ಉನ್ನತ ಶಿಕ್ಷಣ ವಿದ್ಯಾರ್ಥಿವೇತನ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ನಾರಾಯಣಗುರುಗಳ ಆದರ್ಶ ಅಳವಡಿಸಿಕೊಂಡು ಬಿಲ್ಲವ ಸಂಘಟನೆಗಳು ಶಿಕ್ಷಣ, ಸಾಮಾಜಿಕ, ಸಾಂಸ್ಕೃತಿಕತೆಯ ಮೌಲ್ಯವನ್ನು ಎತ್ತಿ ಹಿಡಿಯುವ ಕೆಲಸ ಮಾಡುತ್ತಿದ್ದು, ಇನ್ನಷ್ಟು ಪರಿಣಾಮಕಾರಿಯಾಗಿ ಮುಂದುವರಿಸಬೇಕೆಂದು ಅವರು ನುಡಿದರು.
ಈ ಸಂದರ್ಭ 14 ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ವಿದ್ಯಾರ್ಥಿ ವೇತನ ಹಾಗೂ 7ವಿದ್ಯಾರ್ಥಿಗಳಿಗೆ ಒಟ್ಟು 1.5 ಲಕ್ಷ ರೂ. ಮೊತ್ತದ ವಿದ್ಯಾನಿಧಿಯನ್ನು ಹಸ್ತಾಂತರಿಸಲಾಯಿತು. ಇದೇ ವೇಳೆ ಯು. ಟಿ. ಖಾದರ್ ಅವರನ್ನು ಗೌರವಿಸಲಾಯಿತು.
ಮುಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ವಾಮನ ಕೋಟ್ಯಾನ್ ನಡಿಕುದ್ರು ಅಧ್ಯಕ್ಷತೆ ವಹಿಸಿದ್ದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಅವರು ಮಾತನಾಡಿ ಶುಭಹಾರೈಸಿದರು.
ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ಕೆಪಿಸಿಸಿ ಕೋ-ಆರ್ಡಿನೇಟರ್ ಎಚ್. ವಸಂತ ಬರ್ನಾರ್ಡ್, ಕೆ.ಎಸ್.ರಾವ್ ನಗರ ಬಿಲ್ಲವ ಸಂಘದ ಅಧ್ಯಕ್ಷ ಮಹಾಬಲ ಸನಿಲ್, ಮುಲ್ಕಿ ಪಟ್ಟಣ ಪಂಚಾಯತ್ ಅಧ್ಯಕ್ಷ ಸತೀಶ್ ಅಂಚನ್, ಬಿಲ್ಲವ ಸಂಘದ ಕಟ್ಟಡ ಸಮಿತಿ ಅಧ್ಯಕ್ಷ ಗೋಪಿನಾಥ ಪಡಂಗ, ಪ್ರಧಾನ ಕಾರ್ಯದರ್ಶಿ ಜಯಕುಮಾರ್ ಕುಬೆವೂರು, ಕೋಶಾಧಿಕಾರಿ ಚಂದ್ರಶೇಖರ ಕನ್ನಡರೆಬೆಟ್ಟು, ಶ್ರೀ ನಾರಾಯಣಗುರು ಸಮೂಹ ಶಿಕ್ಷಣ ಸಂಸ್ಥೆಯ ಸಂಚಾಲಕ ಹರೀಂದ್ರ ಸುವರ್ಣ, ಮಹಿಳಾ ಮಂಡಳಿ ಅಧ್ಯಕ್ಷೆ ಶಶಿಕಲಾ ಅಮೀನ್, ಸೇವಾದಳದ ದಳಪತಿ ಶಶಿಕಾಂತ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು.
ನರೇಂದ್ರ ಕೆರೆಕಾಡು ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮಕ್ಕೂ ಮುನ್ನ ಯು.ಟಿ.ಖಾದರ್ ಅವರು ನಾರಾಯಣಗುರು ಮಂದಿರಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.







