ದೇರಳಕಟ್ಟೆ: 'ಯೆನೆಪೊಯ'ದಲ್ಲಿ 'ವಿಶ್ವ ಹೃದಯ ದಿನಾಚರಣೆ' ಸಮಾರೋಪ

ಕೊಣಾಜೆ: ಹೃದಯಾಘಾತ ಸಂದರ್ಭದಲ್ಲಿ ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳು ಹಾಗೂ ಚಿಕಿತ್ಸಾ ವಿಧಾನಗಳ ಕುರಿತು ಸಮಾಜದಲ್ಲಿ ಇನ್ನಷ್ಟು ಅರಿವನ್ನು ಮೂಡಿಸುವ ಕಾರ್ಯಗಳಾಗಬೇಕಿದೆ. ಮುಖ್ಯವಾಗಿ ವಾಹನ ಚಾಲಕರಿಗೆ, ಮಾರುಕಟ್ಟೆ ಸಿಬ್ಬಂದಿ, ಇತರ ವಲಯಗಳ ಕಾರ್ಮಿಕರಿಗೂ ಇಂತಹ ತರಬೇತಿಗಳ ಮೂಲಕ ಜಾಗೃತಿ ಮೂಡಿಸಿದರೆ ಅಮೂಲ್ಯ ಜೀವಗಳ ರಕ್ಷಣೆ ಸಾಧ್ಯ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಎಚ್.ಆರ್. ತಿಮ್ಮಯ್ಯ ಹೇಳಿದ್ದಾರೆ.
ಅವರು ಬುಧವಾರ ಯೆನೆಪೊಯ ಪರಿಗಣಿತ ವಿಶ್ವವಿದ್ಯಾನಿಲಯದ ಯೆನೆಪೊಯ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ವಿಶ್ವ ಹೃದಯ ದಿನಾಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡುತ್ತಿದ್ದರು.
ಇತ್ತೀಚಿನ ದಿನಗಳಲ್ಲಿ ಯುವಕರೂ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ವಿದ್ಯಾರ್ಥಿಗಳು ಈ ನಿಟ್ಟಿನಲ್ಲಿ ಹೃದಯಾಘಾತ ಕುರಿತಾದ ಅರಿವನ್ನು ಬೆಳೆಸಿಕೊಂಡು ಸಮಾಜಕ್ಕೆ ತಲುಪಿಸಬೇಕಿದೆ ಎಂದವರು ಹೇಳಿದರು.
ಯೆನೆಪೊಯ ಪರಿಗಣಿತ ವಿವಿಯ ಕುಲಪತಿ ಪ್ರೊ.ಡಾ.ವಿಜಯ ಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಯೆನೆಪೊಯ ಮೆಡಿಕಲ್ ಕಾಲೇಜು ಆಸ್ಪತ್ರೆಯು ಕಳೆದ ಹಲವಾರು ವರ್ಷಗಳಿಂದ ಹೃದಯ ಸಂಬಂಧಿ ಕಾಯಿಲೆ ಸೇರಿದಂತೆ ಜನರ ಆರೋಗ್ಯ ಸೇವೆಯನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತಾ ಸಮಾಜಪರ ಕಾಳಜಿಯೊಂದಿಗೆ ಮುನ್ನಡೆಯುತ್ತಿದೆ. ಇಲ್ಲಿಯವರಿಗೆ 13,000ಕ್ಕೂ ಹೆಚ್ಚು ಯಶಸ್ವಿ ಹೃದಯ ಶಸ್ತ್ರಚಿಕಿತ್ಸೆಯ ಮೂಲಕ ಆಸ್ಪತ್ರೆಯು ಸಾಧನೆ ಮಾಡಿದೆ ಎಂದರು.
ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ.ನವೀನ್ ಚಂದ್ರ ಕುಲಾಲ್ ಮಾತನಾಡಿ, ಗೃಹಾರೋಗ್ಯ ಸೇವೆಯ ಮೂಲಕ ಕರ್ನಾಟಕ ಸರಕಾರವು ಮನೆ ಮನೆಗೆ ತೆರಳಿ ಜನರ ಆರೋಗ್ಯ ಸಂರಕ್ಷಣೆಯ ಕಾಳಜಿಯೊಂದಿಗೆ ಮುನ್ನಡೆಯುತ್ತಿದೆ ಎಂದರು.
ಮೆಡಿಕಲ್ ಕಾಲೇಜಿನ ಮೆಡಿಕಲ್ ಸುಪರಿಂಟೆಂಡೆಂಟ್ ಡಾ.ಹಬೀಬ್ ರಹ್ಮಾನ್ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಯನೆಪೊಯ ಪರಿಗಣಿತ ವಿವಿ ಕುಲಸಚಿವ ಡಾ.ಕೆ.ಎಸ್.ಗಂಗಾಧರ ಸೋಮಯಾಜಿ, ಪ್ರಾಂಶುಪಾಲ ಡಾ.ಎಂ.ಎಸ್.ಮೂಸಬ್ಬ, ಉಪಪ್ರಾಂಶುಪಾಲ ಡಾ.ಪ್ರಕಾಶ್ ಸಲ್ದಾನ, ಯೆನೆಪೊಯ ಮೆಡಿಕಲ್ ಕಾಲೇಜಿನ ಕಾರ್ಡಿಯಾಲಜಿ ವಿಭಾಗದ ಪ್ರಾಧ್ಯಾಪಕ ಡಾ.ಪ್ರಶಾಂತ್ ಆರ್.ಎಂ. ಮೊದಲಾದವರು ಉಪಸ್ಥಿತರಿದ್ದರು.
ಯನೆಪೊಯ ಮೆಡಿಕಲ್ ಕಾಲೇಜಿನ ಸಹಾಯಕ ವೈದ್ಯಕೀಯ ಅಧೀಕ್ಷಕ ಡಾ.ನಾಗರಾಜ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಮೆಡಿಸಿನ್ ವಿಭಾಗದ ಡೀನ್ ಡಾ.ಅಭಯ್ ನಿರ್ಗುಡೆ ಸ್ವಾಗತಿಸಿದರು. ಸಹಾಯಕ ವೈದ್ಯಕೀಯ ಅಧೀಕ್ಷಕ ಡಾ.ಮುಖ್ತಾರ್ ಅಬ್ದುಲ್ಲಾ ವಂದಿಸಿದರು. ಸುಶ್ಮಿತಾ ಕಾರ್ಯಕ್ರಮ ನಿರೂಪಿಸಿದರು.







