ಮಂಗಳೂರು: ರಾಜ್ಯೋತ್ಸವ ಅದ್ದೂರಿಯಾಗಿ ಆಚರಿಸಲು ಅಗತ್ಯ ಸಿದ್ಧತೆಗೆ ಅಪರ ಜಿಲ್ಲಾಧಿಕಾರಿ ಸೂಚನೆ

ಮಂಗಳೂರು: ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ. ಹಾಗಾಗಿ ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ರಾಜು ಸೂಚಿಸಿದರು.
ದ.ಕ.ಜಿಲ್ಲಾಧಿಕಾರಿಯ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ರಾಜ್ಯೋತ್ಸವದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕನ್ನಡ ನಾಡು, ನುಡಿಯ ಬಗ್ಗೆ ಜಾಗೃತಿ ಮೂಡಿಸುವಂತಹ ಕಾರ್ಯಕ್ರಮಗಳನ್ನು ರೂಪಿಸಬೇಕು. ಶಾಲಾ ಶಿಕ್ಷಣ ಇಲಾಖೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಸಂಯುಕ್ತವಾಗಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಬೇಕು. ಪ್ರತಿ ವಷರ್ದಂತೆ ರಾಜ್ಯೋತ್ಸವವನ್ನು ನೆಹರೂ ಮೈದಾನದಲ್ಲಿ ಆಯೋಜಿಸಲಾಗುತ್ತದೆ ಎಂದು ಹೇಳಿದರು.
ರಾಜ್ಯೋತ್ಸವದ ಮುನ್ನ ದಿನ ಪ್ರಮುಖ ಸರಕಾರಿ ಕಟ್ಟಡಗಳನ್ನು ದೀಪಾಲಂಕಾರ ಮಾಡಬೇಕು. ಮಹಾನಗರ ಪಾಲಿಕೆ ವತಿಯಿಂದ ವೇದಿಕೆ ಹಾಗೂ ಇತರೆ ಸಿದ್ಧತೆಗಳನ್ನು ಏರ್ಪಡಿಸಲು ಅಪರ ಜಿಲ್ಲಾಧಿಕಾರಿ ಸೂಚಿಸಿದರು.
ಸಭೆಯಲ್ಲಿ ಉಪ ಪೊಲೀಸ್ ಆಯುಕ್ತ ಉಮೇಶ್ ಪಿ., ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಮತ್ತಿತರರು ಉಪಸ್ಥಿತರಿದ್ದರು.





