ಅ.14 ರಂದು ಬಸವರಾಜ ಹೊರಟ್ಟಿಗೆ ಕಾರಂತ ಪ್ರಶಸ್ತಿ ಪ್ರದಾನ

ಬಸವರಾಜ ಹೊರಟ್ಟಿ
ಮಂಗಳೂರು: ಕಡಲ ತೀರದ ಭಾರ್ಗವ, ಸಾಹಿತಿ ಕೋಟ ಡಾ.ಶಿವರಾಮ ಕಾರಂತರ ಹುಟ್ಟು ಹಬ್ಬದ ಅಂಗವಾಗಿ ಕಲ್ಕೂರ ಪ್ರತಿಷ್ಠಾನದಿಂದ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಗೆ ಕಾರಂತ ಪ್ರಶಸ್ತಿಯನ್ನು ಅ.14ರಂದು ಬೆಳಗ್ಗೆ 10ಕ್ಕೆ ನಗರದ ಕೊಡಿಯಾಲ್ಬೈಲ್ನ ಶಾರದಾ ವಿದ್ಯಾಲಯದ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ್ ಕುಮಾರ ಕಲ್ಕೂರ ತಿಳಿಸಿದ್ದಾರೆ.
ವಿಶ್ರಾಂತ ಉಪಕುಲಪತಿ ಪ್ರೊ.ಬಿ.ಎ. ವಿವೇಕ ರೈ ಕಾರಂತರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವರು. ಮಂಗಳೂರು ವಿವಿ ಕುಲಪತಿ ಪ್ರೊ. ಪಿ.ಎಲ್. ಧರ್ಮ ಕಾರಂತ ಪ್ರಶಸ್ತಿ ಪ್ರದಾನ ಮಾಡುವರು. ವಿದ್ವಾಂಸ ಡಾ.ಎಂ. ಪ್ರಭಾಕರ ಜೋಶಿ ಅವರು ಶಿವರಾಮ ಕಾರಂತ ಸಂಸ್ಮರಣೆಗೈಯ್ಯುವರು. ಪ್ರಬಂಧ ಸ್ಪರ್ಧೆ ವಿಜೇತರಿಗೆ ಶಾಸಕ ಐವನ್ ಡಿಸೋಜ ಮತ್ತು ಅಂಚೆಕಾರ್ಡಿನಲ್ಲಿ ಕಾರಂತರ ಚಿತ್ರರಚನಾ ಸ್ಪರ್ಧೆಯ ವಿಜೇತರಿಗೆ ಸಂತ ಅಲೋಶಿಯಸ್ ಪ್ರೌಢಶಾಲೆಯ ಪ್ರಾಂಶುಪಾಲ ಫಾ. ಜಾನ್ಸನ್ ಪಿಂಟೋ ಬಹುಮಾನ ವಿತರಿಸುವರು ಎಂದು ಪ್ರಕಟನೆ ತಿಳಿಸಿದೆ.
Next Story





