ಧರ್ಮಸ್ಥಳ ಪ್ರಕರಣ: ದೂರುದಾರ ಚಿನ್ನಯ್ಯನೇ ಮೊದಲ ಆರೋಪಿ!

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಡಲಾಗಿದೆ ಎಂಬ ಆರೋಪದ ಪ್ರಕರಣವು ದಿನಕ್ಕೊಂದು ತಿರುವು ಪಡೆಯುತ್ತಿದೆ. ಅನಾಮಿಕ ದೂರುದಾರನಾಗಿ ಗುರುತಿಸಿಕೊಂಡಿದ್ದ ಚಿನ್ನಯ್ಯ ಎಂಬ ವ್ಯಕ್ತಿಯನ್ನೇ ವಿಶೇಷ ತನಿಖಾ ದಳ (ಎಸ್ಐಟಿ) ಪ್ರಥಮ ಆರೋಪಿ (A-1) ಯನ್ನಾಗಿ ಮಾಡಿ, ಹತ್ತು ಹೊಸ ಭಾರತೀಯ ನ್ಯಾಯ ಸಂಹಿತೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದೆ ಎಂದು ಎಸ್ ಐಟಿ ಮೂಲಗಳಿಂದ ತಿಳಿದು ಬಂದಿದೆ.
ಈತ ನ್ಯಾಯಾಲಯಕ್ಕೆ ತಂದಿರುವ ತಲೆಬುರುಡೆಯ ವಿಚಾರದಲ್ಲಿ ಈ ಎಲ್ಲ ಬೆಳವಣಿಗೆಗಳು ನಡೆಯುತ್ತಿವೆ. ತಲೆಬುರುಡೆಯನ್ನು ತೆಗೆದ ಜಾಗದ ಮಹಜರು ಪ್ರಕ್ರಿಯೆ ಇನ್ನೂ ಮಾಡಲು ಸಾಧ್ಯವಾಗಿಲ್ಲ. ಈತ ನ್ಯಾಯಾಲಯಕ್ಕೆ ಸುಳ್ಳು ಮಾಹಿತಿ ನೀಡಿ ಇಡೀ ವ್ಯವಸ್ಥೆಯನ್ನು ಗೊಂದಲಕ್ಕೆ ಸಿಲುಕಿಸಿದ್ದಾನೆ ಎಂದು ಆರೋಪಿಸಲಾಗಿದೆ.
ಈತ ನ್ಯಾಯಾಧೀಶರ ಮುಂದೆ ಸೆಕ್ಷನ್ 164 ಅಡಿಯಲ್ಲಿ ಹೇಳಿಕೆಯನ್ನು ದಾಖಲಿಸಿದ್ದು, ಈ ಹೇಳಿಕೆಯ ವೇಳೆ ನೀಡಿದ್ದ ಹೇಳಿಕೆಗೆ ವ್ಯತಿರಿಕ್ತವಾಗಿ ಆತ ಇದೀಗ ಎಸ್.ಐ.ಟಿಗೆ ಹೇಳಿಕೆ ನೀಡಿದ್ದಾನೆ. ಅಲ್ಲದೆ ಈತನ ಹೊಸ ಹೇಳಿಕೆಯನ್ನು ನ್ಯಾಯಾಧೀಶರ ಮುಂದೆ ದಾಖಲಿಸಲಾಗಿದ್ದು ಅದರ ಆಧಾರದ ಮೇಲೆ ತನಿಖೆ ನಡೆಯುತ್ತಿದೆ ಎಂದು ತಿಳಿದು ಬಂದಿದೆ.
ಇದೀಗ ಪ್ರಕರಣದಲ್ಲಿ ಈ ಹಿಂದೆ ದಾಖಲಾಗಿದ್ದ ಪ್ರಕರಣ 39/25ರಲ್ಲಿ ಹೊಸದಾಗಿ ಹಲವು ಸೆಕ್ಷನ್ ಗಳನ್ನು ಸೇರಿಸಲಾಗಿದೆ. ಈಗ ದಾಖಲಾಗಿರುವ ಹೊಸ ಪ್ರಕರಣಗಳ ಬಗ್ಗೆ ನ್ಯಾಯಾಲಯದಿಂದ ಮಾಹಿತಿಗಳು ಲಭ್ಯವಾಗುತ್ತಿಲ್ಲವಾದರೂ ಲಭ್ಯ ಮಾಹಿತಿಗಳಂತೆ ಇದೀಗ ಸಾಕ್ಷಿ ದೂರುದಾರನಾಗಿ ಬಂದ ಚಿನ್ನಯ್ಯನ ವಿರುದ್ದ BNS 336 (ಸುಳ್ಳು ಮಾಹಿತಿ ನೀಡಿ ಸಾರ್ವಜನಿಕರನ್ನು ಭಯಭೀತಗೊಳಿಸುವುದು), 230 (ಸಾರ್ವಜನಿಕ ಸೇವಕರಿಗೆ ತಪ್ಪು ಮಾಹಿತಿ ನೀಡುವುದು), 231 (ನ್ಯಾಯಾಲಯದ ಕಾರ್ಯಕ್ಕೆ ಅಡ್ಡಿಪಡಿಸುವುದು), 229 (ಸುಳ್ಳು ಸಾಕ್ಷ್ಯ ನೀಡುವುದು), 227 (ಸಾರ್ವಜನಿಕ ಶಾಂತಿ ಕದಡುವುದು), 228 (ನ್ಯಾಯಾಲಯಕ್ಕೆ ಅಪಮಾನ ಮಾಡುವುದು), 240 (ತಪ್ಪು ಮಾಹಿತಿ ನೀಡಿ ತನಿಖೆ ದಿಕ್ಕು ತಪ್ಪಿಸುವುದು), 236 (ಪಿತೂರಿ), 233 (ತಪ್ಪಾಗಿ ಜನರನ್ನು ಪ್ರೇರೇಪಿಸುವುದು) ಮತ್ತು 248 (ಸುಳ್ಳು ದೂರು ನೀಡಿ ಸಮಯ ಹಾಳುಮಾಡುವುದು) ಸೆಕ್ಷನ್ ಅಡಿಯಲ್ಲಿ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಇದೀಗ ಮಹೇಶ್ ಶೆಟ್ಟಿ ಮನೆಯಲ್ಲಿದ್ದ ಚಿನ್ನಯ್ಯನಿಗೆ ಸೇರಿದ ವಸ್ತುಗಳನ್ನು ವಶಪಡಿಸಿಕೊಂಡು ಮಹಜರು ಮಾಡುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗಿದೆ.
ಚಿನ್ನಯ್ಯನ ವಿರುದ್ದ ದಾಖಲಾಗಿರುವ ಪ್ರಕರಣಗಳ ಬಗ್ಗೆ ಹಾಗೂ ಈತ ಹೊಸದಾಗಿ ನಿಡಿರುವ ಹೇಳಿಕೆಗಳನ್ನು ನ್ಯಾಯಾಲಯ ಗೌಪ್ಯವಾಗಿ ಇರಿಸಿದೆ. ಈತನ ವಿರುದ್ದ ಪ್ರಕರಣ ದಾಖಲಾಗಿದ್ದರೂ ಈತನಿಗೆ ನೀಡಲಾಗಿರುವ ಸಾಕ್ಷಿ ಸಂರಕ್ಷಣೆ ಇನ್ನು ಮುಂದುವರಿದಿದ್ದು, ಈ ಕಾರಣದಿಂದಾಗಿ ಮಾಹಿತಿಗಳನ್ನು ಬಹಿರಂಗ ಪಡಿಸಲಾಗುತ್ತಿಲ್ಲ ಎಂದು ತಿಳಿದು ಬಂದಿದೆ.
ಎಸ್.ಐ.ಟಿ ಅಧಿಕಾರಿಗಳು ನ್ಯಾಯಾಲಯದ ಮುಂದೆ ಈ ಪ್ರಕರಣದ ಮಾಹಿತಿಗಳನ್ನು ಗೌಪ್ಯವಾಗಿಡುವಂತೆ ಮನವಿ ಮಾಡಿದ್ದು, ನ್ಯಾಯಾಲಯ ಇದಕ್ಕೆ ಒಪ್ಪಿ ಗೆ ನೀಡಿದೆ.







