ಮಕ್ಕಳಿಗೆ ವಿದ್ಯಾಭ್ಯಾಸ ನೀಡಿ ಮುಖ್ಯವಾಹಿನಿಗೆ ತನ್ನಿ: ಶಾಸಕ ಗುರ್ಮೆ ಸುರೇಶ್ ಶೆಟ್ಟಿ
ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟದಿಂದ ಶಾಸಕರಿಗೆ ಅಭಿನಂದನೆ

ಕಾಪು : ಕೊರಗ ಸಮುದಾಯದವರು ತಮ್ಮ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸವನ್ನು ನೀಡಿ ಅವರನ್ನು ಉತ್ತಮ ವ್ಯಕ್ತಿಯನ್ನಾಗಿ ರೂಪಿಸಬೇಕು ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಕರೆ ನೀಡಿದರು.
ಅವರು ಶನಿವಾರ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ಕರ್ನಾಟಕ-ಕೇರಳ ವತಿಯಿಂದ ಶನಿವಾರ ಕಾಪು ಪುರಸಭಾ ಸಭಾಂಗಣದಲ್ಲಿ ಮಾತನಾಡಿದರು.
ನಮ್ಮ ಸಮಾಜದಲ್ಲಿ ಅತಿ ಹಿಂದುಳಿದ ಸಮುದಾಯದಲ್ಲಿ ಕೊರಗ ಸಮುದಾಯವು ಒಂದು. ಹುಟ್ಟಿನಿಂದ ಯಾರೂ ಶ್ರೇಷ್ಠರಲ್ಲ ಯಾರೂ ಕನಿಷ್ಟರಲ್ಲ. ಕೊರಗ ಸಮುದಾಯದವರು ಮುಖ್ಯ ವಾಹಿನಿಗೆ ಬರಬೇಕು ಎಂದು ಹೇಳಿದ ಅವರು ಕೊರಗ ಸಮುದಾಯದವರ ಏಳಿಗೆಗೆ ಶ್ರಮಿಸಲು ನಾನು ಬದ್ಧ ಎಂದರು.
ಇದೇ ಸಂದರ್ಭದಲ್ಲಿ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ಕರ್ನಾಟಕ-ಕೇರಳ ವತಿಯಿಂದ ಶಾಸಕರನ್ನು ಅಭಿನಂದಿಸಲಾಯಿತು.
ಪುರಸಭಾ ಸದಸ್ಯರಾದ ಅರುಣ್ ಶೆಟ್ಟಿ ಪಾದೂರು, ಕಾಪು ಕೊರಗ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಸುಮಾ, ಕೊರಗ ಒಕ್ಕೂಟದ ಪ್ರತಿನಿಧಿಯಾದ ವಿನಯ ಅಡ್ವೆ, ಕೊರಗ ಜಿಲ್ಲಾ ಸಮಿತಿಯ ನಿಕಟ ಪೂರ್ವ ಅಧ್ಯಕ್ಷರಾದ ಬೊಗ್ರ ಕೊರಗ, ಸಮಗ್ರ ಗ್ರಾಮೀಣ ಆಶ್ರಮದ ಕಾರ್ಯಕರ್ತ ಅಶೋಕ ಶೆಟ್ಟಿ ಉಪಸ್ಥಿತರಿದ್ದರು.





