ಅಕ್ಕ ಪಡೆ ಯೋಜನೆಯ ವಾಹನಕ್ಕೆ ಚಾಲನೆ

ಮಂಗಳೂರು: ದ.ಕ.ಜಿಲ್ಲೆಯ ಮಹಿಳೆಯರು ಮತ್ತು ಮಕ್ಕಳ ಸಮಗ್ರ ಅಭಿವೃದ್ಧಿಗೆ ಹಾಗೂ ಅವರ ಸುರಕ್ಷತೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಸ್ಥಾಪಿಸಲಾಗಿರುವ ಅಕ್ಕ ಪಡೆ ಯೋಜನೆಯ ವಾಹನಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ. ಚಾಲನೆ ನೀಡಿದರು.
ರಾಜ್ಯ ಸರಕಾರವು ಸಂಕಷ್ಟ್ಟದಲ್ಲಿರುವ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣ ರಕ್ಷಣೆ ನೀಡುವ ಉದ್ದೇಶದಿಂದ 31 ಜಿಲ್ಲೆಗಳಲ್ಲಿ ಅಕ್ಕ ಪಡೆ ಯೋಜನೆಯು ಜಾರಿಗೆ ತಂದಿದೆ. 5 ಮಹಿಳಾ ಗೃಹ ರಕ್ಷಕರ ತಂಡವು ಅಪಾಯದಲ್ಲಿರುವ ಅಥವಾ ಸಂಕಷ್ಟದಲ್ಲಿರುವ ದುರ್ಬಲ ಮಹಿಳೆಯರು ಮತ್ತು ಮಕ್ಕಳಿಗೆ ರಕ್ಷಣೆ ನೀಡುವುದು ಅಕ್ಕ ಪಡೆ ಯೋಜನೆಯ ಪ್ರಾಥಮಿಕ ಉದ್ದೇಶವಾಗಿದೆ.
ಜಿಲ್ಲಾ ಮಟ್ಟದಲ್ಲಿ ಮಹಿಳಾ ಗೃಹ ರಕ್ಷಕರನ್ನು ಒಳಗೊಂಡ ’ಅಕ್ಕ ಪಡೆ’ ತಂಡವು ಸ್ಥಳೀಯ ಪೊಲೀಸರ ನಿಕಟ ಸಹಯೋಗದೊಂದಿಗೆ ಬೆಳಗ್ಗೆ 7ರಿಂದ ರಾತ್ರಿ 8ರವರೆಗೆ ಎರಡು ಪಾಳಿಗಳಲ್ಲಿ ಅಂದರೆ ಬೆಳಗ್ಗೆ 7ರಿಂದ ಮಧ್ಯಾಹ್ನ 2 ಮತ್ತು ಮಧ್ಯಾಹ್ನ 2ರಿಂದ ರಾತ್ರಿ 8 ರವರೆಗೆ ಕಾರ್ಯನಿರ್ವಹಿಸಲಿದೆ. ತಂಡದ ಸದಸ್ಯರನ್ನು ಶಾಲೆ, ಕಾಲೇಜು, ಬಾಲಕಿಯರ/ಮಹಿಳಾ ಹಾಸ್ಟೆಲ್,ಬಸ್/ರೈಲ್ವೆ ನಿಲ್ದಾಣಗಳು, ಸ್ಥಳೀಯ ಮಾರುಕಟ್ಟೆ, ಪ್ರೇಕ್ಷಣಿಯ ಸ್ಥಳಗಳು, ಪವಿತ್ರ ಸ್ಥಳಗಳು ಮತ್ತು ಇತರ ಸೂಕ್ಷ್ಮ ಸ್ಥಳಗಳಲ್ಲಿ ನಿಯೋಜಿಸಲಾಗುತ್ತದೆ ಎಂದು ಪ್ರಕಟನೆ ತಿಳಿಸಿದೆ.







