ಮಂಗಳೂರು| ಗಡಿಜಿಲ್ಲೆಗಳ ಪೊಲೀಸ್ ಅಧಿಕಾರಿಗಳ ಸಮನ್ವಯ ಸಭೆ

ಮಂಗಳೂರು, ನ.22: ಕೇರಳದಲ್ಲಿ ನಡೆಯಲಿರುವ ಮುಂಬರುವ ಚುನಾವಣೆಗೆ ಸಂಬಂಧಿಸಿ ಗಡಿಜಿಲ್ಲೆಗಳ ಪೊಲೀಸ್ ಅಧಿಕಾರಿಗಳ ಸಮನ್ವಯ ಸಭೆ ಮಂಗಳೂರು ನಗರ ಆಯುಕ್ತರ ಕಚೇರಿಯಲ್ಲಿ ಶನಿವಾರ ನಡೆಯಿತು.
ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಕೇರಳದ ಕಣ್ಣೂರು ವಲಯದ ಡಿಐಜಿಪಿ ಯತೀಶ್ಚಂದ್ರ ಜಿ. ಎಚ್ ಮತ್ತು ಕಾಸರಗೋಡು ಎಸ್ಪಿ ವಿಜಯ ಭರತ್ ರೆಡ್ಡಿ, ಮಂಗಳೂರು ಡಿಸಿಪಿ ಮಿಥುನ್ ಎಚ್ ಎನ್ ಸಭೆಯಲ್ಲಿ ಭಾಗವಹಿಸಿದ್ದರು.
ಸಭೆಯಲ್ಲಿ ಉಭಯ ರಾಜ್ಯಗಳ ಗಡಿ ಜಿಲ್ಲೆಗಳಲ್ಲಿ ನಡೆಯುವ ಅಪರಾಧ ಪ್ರಕರಣಗಳ ಮಾಹಿತಿ ವಿನಿಮಯ ಮಾಡಿಕೊಂಡಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳು, ವಾರಂಟ್ನ ಅಸಾಮಿಗಳು, ಅಂತರ್ ರಾಜ್ಯ ಅಪರಾಧ ಪ್ರಕರಣಗಳು, ಮಾದಕದ್ರವ್ಯ ಸಾಗಾಟ ಇತ್ಯಾದಿ ವಿಷಯಗಳ ಬಗ್ಗೆ ಚರ್ಚಿಸಲಾಯಿತು.
ಅಲ್ಲದೇ ಎರಡೂ ರಾಜ್ಯಗಳಲ್ಲಿ ದಾಖಲಾದ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ಗಡಿ ಜಿಲ್ಲೆಗಳಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳು ಮತ್ತು ವಾರಂಟ್ ಅಸಾಮಿಗಳ ಮಾಹಿತಿ ವಿನಿಮಯ ಮತ್ತು ಪತ್ತೆಯ ಬಗ್ಗೆ ಕಾರ್ಯಯೋಜನೆಯನ್ನು ರೂಪಿಸಲಾಗಿದ್ದು, ಅಪರಾಧ ಪ್ರಕರಣಗಳ ನಿಯಂತ್ರಣ ಮತ್ತು ಪತ್ತೆ ಕಾರ್ಯದಲ್ಲಿ ಪರಸ್ಪರ ಸಹಕಾರ, ಜಂಟಿ ಕಾರ್ಯಾಚರಣೆಗಳ ಬಗ್ಗೆ ಚರ್ಚಿಸಿ, ವಿಚಾರ ವಿನಿಮಯ ನಡೆಸಲಾಗಿರುತ್ತದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.





