ಸಿಆರ್ಝಡ್ ಉಲ್ಲಂಘನೆ ವಿರುದ್ಧ ಕ್ರಮ: ಸಚಿವ ಈಶ್ವರ ಖಂಡ್ರೆ
ಕಡಲಾಮೆ ಮೊಟ್ಟೆ ಪತ್ತೆ ಮಾಡಿದವರಿಗೆ ಬಹುಮಾನ ವಿತರಣೆ

ಮಂಗಳೂರು: ಕರಾವಳಿ ನಿಯಂತ್ರಣ ವಲಯ ಉಲ್ಲಂಘನೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ವರದಿ ಸಿದ್ಧಪಡಿಸುವಂತೆ ರಾಜ್ಯ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಅರಣ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ನಗರದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯ ಕಚೇರಿಯಲ್ಲಿ ಮಂಗಳವಾರ ನಡೆದ ಪರಿಸರ ಮತ್ತು ಅರಣ್ಯ ಇಲಾಖೆಯ ಪರಾಮರ್ಶೆ ಸಭೆ ನಡೆಸಿ ಮಾತನಾಡಿದರು.
ಕರ್ನಾಟಕದ ಕರಾವಳಿ ತೀರದಲ್ಲಿ ನಿರ್ಮಾಣ ಮಾಡಲಾಗಿರುವ ಕಟ್ಟಡಗಳ ಪಟ್ಟಿಯನ್ನು ಸಿದ್ಧಪಡಿಸಿ ಅವುಗಳಲ್ಲಿ ನಿಯಮ ಉಲ್ಲಂಘಿಸಿರುವವರ ವಿರುದ್ಧ ಮತ್ತು ಮಂಗಳೂರು ಅರಣ್ಯ ವೃತ್ತದಲ್ಲಿ ಸೆಕ್ಷನ್ 17ರಡಿ ಆಗದ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲು ಕ್ರಮ ಕೈಗೊಳ್ಳುವಂತೆ ಸಚಿವರು ಸೂಚಿಸಿದರು.
ಒಂದೇ ಸರ್ವೆ ನಂಬರ್ನಲ್ಲಿ ಸಾವಿರಾರು ಎಕರೆ ಅರಣ್ಯ ಮತ್ತು ಕಂದಾಯ ಭೂಮಿ ಇರುವ ಪ್ರದೇಶಗಳಲ್ಲಿ ತ್ವರಿತವಾಗಿ ಜಂಟಿ ಸರ್ವೆ ನಡೆಸಬೇಕು. ಮಂಗಳೂರು ವೃತ್ತದಲ್ಲಿ ಕಡಲ್ಕೊರೆತ ತಡೆಯಲು ಕಾಂಡ್ಲಾ ವನ (ಮ್ಯಾಂಗ್ರೋ)ಬೆಳೆಸುವಂತೆ ಮತ್ತು ಕಡಲ ತೀರದಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಶೇಖರಣೆಯಾಗದಂತೆ ಕ್ರಮ ವಹಿಸಲು ಸಚಿವರು ಸೂಚನೆ ನೀಡಿದರು.
ಕಡಲಾಮೆ ಮೊಟ್ಟೆ ಪತ್ತೆ ಹಚ್ಚಿದ ಮೀನುಗಾರರಿಗೆ ಬಹುಮಾನ
ತಣ್ಣೀರುಬಾವಿಯ ಕಡಲ ತೀರದಲ್ಲಿ ಅಪರೂಪದ ಆಲಿವ್ ರೆಡ್ಲಿ ಕಡಲಾಮೆ ಮೊಟ್ಟೆ ಇಟ್ಟಿರುವುದನ್ನು ಪತ್ತೆ ಮಾಡಿ ಸಂರ ಕ್ಷಣೆಗೆ ನೆರವಾದ ಸಸಿಹಿತ್ಲು ಗ್ರಾಮದ ಮೀನುಗಾರರಾದ ಆನಂದ ಕೋಟ್ಯಾನ್ ಮತ್ತು ವಾಸು ಕೋಟ್ಯಾನ್ಗೆ ಸಚಿವರು ೫ ಸಾವಿರ ರೂ. ಬಹುಮಾನ ಮತ್ತು ಪ್ರಶಂಸಾ ಪತ್ರ ಪ್ರದಾನ ಮಾಡಿದರು.
*ಬೈಕಂಪಾಡಿ ಕೈಗಾರಿಕಾ ಪ್ರದೇಶ ತ್ಯಾಜ್ಯ ನೀರು ಪರಿಶೀಲಿಸಿ
ಪರಿಸರ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು ಬೈಕಂಪಾಡಿ ಕೈಗಾರಿಕಾ ಪ್ರದೇಶದಿಂದ ತ್ಯಾಜ್ಯ ಮತ್ತು ರಾಸಾಯನಿಕ ತ್ಯಾಜ್ಯ ಸಂಸ್ಕರಣೆ ಆಗದೆ ಫಲ್ಗುಣಿ ನದಿಯನ್ನು ಸೇರುತ್ತಿದೆ ಎಂಬ ಬಗ್ಗೆ ದೂರುಗಳಿವೆ. ಈ ಬಗ್ಗೆ ನಿಯಮಿತ ವಾಗಿ ನೀರಿನ ಗುಣಮಟ್ಟ ಪರೀಕ್ಷಿಸಬೇಕು. ನಿಯಮ ಪಾಲಿಸದ ಕೈಗಾರಿಕಾ ಘಟಕಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದರು.
ಮತ್ಸ್ಯ ಸಂಸ್ಕರಣಾ ಘಟಕಗಳಿಂದ ದುರ್ನಾತ ಬರುತ್ತಿದ್ದು, ಜನರು ತೀವ್ರ ಸಂಕಷ್ಟ ಅನುಭಸುವಂತಾಗಿದೆ ಎಂಬ ದೂರುಗಳನ್ನೂ ಗಂಭೀರವಾಗಿ ಪರಿಗಣಿಸಿದ ಸಚಿವರು ಈ ಘಟಕಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು ಎಂದು ಸೂಚಿಸಿದರು.
ಅರಣ್ಯ ಒತ್ತುವರಿಯೂ ಹೆಚ್ಚಾಗುತ್ತಿದೆ. ಕೆಲವರು ಶುಂಠಿ ಬೆಳೆಯುವ ಹೆಸರಲ್ಲಿ ೩ ಎಕರೆ ೫ ಎಕರೆ ಭೂಮಿ ಗುತ್ತಿಗೆ ಪಡೆದು ಅಥವಾ ಖರೀದಿಸಿ ಸುತ್ತಮುತ್ತಲಿನ ಅರಣ್ಯ ನಾಶ ಮಾಡುತ್ತಿದ್ದಾರೆ ಎಂಬ ದೂರಿದೆ.ಈ ನಿಟ್ಟಿನಲ್ಲಿ ಅರಣ್ಯ ಇಲಾಖೆ ಕಾಲಕಾಲಕ್ಕೆ ಸ್ಯಾಟಲೈಟ್ ಚಿತ್ರಗಳ ಮೂಲಕ ಪರಿಶೀಲನೆ ನಡೆಸಿ, ಅರಣ್ಯನಾಶವಾಗಿದ್ದರೆ ನಿರ್ದಾಕ್ಷಿಣ್ಯ ಕ್ರಮ ವಹಿಸುವಂತೆ ಸೂಚಿಸಿದರು.
1978ರಲ್ಲಿ ಅರಣ್ಯ ಸಂರಕ್ಷಣಾ ಕಾಯ್ದೆು ಜಾರಿಗೆ ಬರುವ ಮೊದಲು 3 ಎಕರೆಗಿಂತ ಕಡಿಮೆ ಭೂಮಿಯಲ್ಲಿ ಉಳಿಮೆ ಮಾಡುತ್ತಿ ರುವ ಮತ್ತು ಸಣ್ಣ ಮನೆ ಕಟ್ಟಿಕೊಂಡು ವಾಸ ಮಾಡುತ್ತಿರುವ ಜನರನ್ನು ಅರಣ್ಯ ಪ್ರದೇಶದಿಂದ ಒಕ್ಕಲೆಬ್ಬಿಸದಂತೆ ಮತ್ತು ಹತ್ತಾರು ಎಕರೆ ಭೂಮಿಯನ್ನು ಸ್ವಾರ್ಥಕ್ಕಾಗಿ ಒತ್ತುವರಿ ಮಾಡಿರುವವರ ವಿರುದ್ಧ ಕಠಿಣಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.







