ವಾರದೊಳಗೆ ಕಲ್ಲಡ್ಕ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಉಸ್ತುವಾರಿ ಸಚಿವರ ಸೂಚನೆ
![ವಾರದೊಳಗೆ ಕಲ್ಲಡ್ಕ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಉಸ್ತುವಾರಿ ಸಚಿವರ ಸೂಚನೆ ವಾರದೊಳಗೆ ಕಲ್ಲಡ್ಕ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಉಸ್ತುವಾರಿ ಸಚಿವರ ಸೂಚನೆ](https://www.varthabharati.in/h-upload/2024/06/10/1271333-10-meeting.webp)
ಮಂಗಳೂರು,ಜೂ.10: ದ.ಕ.ಜಿಲ್ಲೆಯಲ್ಲಿ ಹಾದುಹೋಗಿರುವ ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳನ್ನು ಸಮರ್ಪಕ ದುರಸ್ತಿ ಮಾಡಿ ಸುಗಮ ಸಂಚಾರಕ್ಕೆ ಅನುಕೂಲಕರವಾಗಿ ಮಾಡುವಂತೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೆದ್ದಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಳೆಗಾಲದ ಸಿದ್ಧತೆಗಳ ಬಗ್ಗೆ ದ.ಕ. ಜಿಲ್ಲಾಧಿಕಾರಿಯ ಕಚೇರಿಯಲ್ಲಿ ಸೋಮವಾರ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.
ಬಿ.ಸಿ.ರೋಡ್-ಕಲ್ಲಡ್ಕ-ಮಾಣಿ ರಾ.ಹೆ.ಯ ದುರಸ್ತಿಯನ್ನು ಒಂದು ವಾರದೊಳಗೆ ಪೂರ್ಣಗೊಳಿಸಬೇಕು. ಮಳೆಯ ನೀರು ಹರಿದು ಹೋಗಲು ಸಮರ್ಪಕ ಚರಂಡಿ ವ್ಯವಸ್ಥೆ ಕಲ್ಪಿಸಬೇಕು ಎಂದು ಸೂಚಿಸಿದ ಅವರು ವಾಹನಗಳು ಸುಗಮವಾಗಿ ಸಂಚರಿಸಲು ರಸ್ತೆಯನ್ನು ಅಭಿವೃದ್ಧಿಪಡಿಸಬೇಕು. ಮಳೆಯಿಂದ ಕಾಮಗಾರಿಗೆ ಹಾನಿಯಾದರೆ ಮತ್ತೆ ದುರಸ್ತಿ ಮಾಡಬೇಕು. ಮಳೆಗಾಲ ಪೂರ್ಣಗೊಳ್ಳುವವರೆಗೂ ಈ ಹೆದ್ದಾರಿ ಮೇಲೆ ನಿಗಾ ವಹಿಸಬೇಕು ಎಂದು ದಿನೇಶ್ ಗುಂಡೂರಾವ್ ಸೂಚಿಸಿದರು.
ಮಳೆಗಾಲಕ್ಕೆ ಮುಂಚಿತವಾಗಿ ಕಲ್ಲಡ್ಕ ಹೆದ್ದಾರಿಯಲ್ಲಿ ಚರಂಡಿ ನಿರ್ಮಾಣಕ್ಕೆ ವಿಳಂಬಿಸಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅವರು ಆದ್ಯತೆಯಲ್ಲಿ ಕಾಮಗಾರಿ ನಡೆಸಲು ಸೂಚಿಸಿದರು.
ಕಲ್ಲಡ್ಕ ಪೇಟೆಯ ರಾ.ಹೆ.ಯಲ್ಲಿ ಸಂಚಾರ ತೀವ್ರ ದುಸ್ತರವಾಗಿದೆ. ಸಾರ್ವಜನಿಕರು ಪ್ರತಿಕ್ಷಣವೂ ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ. ಇದರಿಂದ ಮಾಣಿ-ಬಿಸಿ.ರೋಡ್ ಮಧ್ಯ ಸಂಚಾರವು ದುಸ್ತರವಾಗಿದೆ. ಸಾರ್ವಜನಿಕರು ಇತರ ಮಾರ್ಗದಲ್ಲಿ ಸಂಚರಿಸುತ್ತಿದ್ದಾರೆ ಎಂದು ಶಾಸಕ ಅಶೋಕ್ ಕುಮಾರ್ ರೈ ಸಚಿವರ ಗಮನ ಸೆಳೆದರು.
ಶಾಸಕ ಹರೀಶ್ ಕುಮಾರ್ ಮಾತನಾಡಿ ಪುಂಜಾಲಕಟ್ಟೆ - ಚಾರ್ಮಾಡಿ ಹೆದ್ದಾರಿ ವಿಸ್ತರಣೆ ಕಾಮಗಾರಿಯಿಂದ ಇದೀಗ ಸುಗಮ ಸಂಚಾರಕ್ಕೆ ಸಮಸ್ಯೆಯಾಗುತ್ತಿದೆ ಎಂದರು.
ಕೂಳೂರು ರಾ.ಹೆ.ಯಲ್ಲಿ ಹೊಸ ಸೇತುವೆ ನಿರ್ಮಾಣಕ್ಕೆ ಅಡಿಪಾತ್ರದಲ್ಲಿ ಹಾಕಿರುವ ಮಣ್ಣಿನಿಂದ ಮಳೆಗಾಲದಲ್ಲಿ ನದಿ ನೀರಿನ ಸುಗಮ ಹರಿವಿಗೆ ಅಡ್ಡಿಯಾಗಿ ಹಾಲಿ ಸೇತುವೆಗೆ ಅಪಾಯ ಸಾಧ್ಯತೆ ಇರುವುದರಿಂದ ಈ ಮಣ್ಣನ್ನು ತೆರವು ಗೊಳಿಸಲು ರಾ.ಹೆ. ಇಲಾಖೆಗೆ ತಿಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದರು.
ರಾ.ಹೆ. ಪ್ರಾಧಿಕಾರದ ಅಧಿಕಾರಿ ನವೀನ್ ಮಾತನಾಡಿ ಕೂಳೂರು ಸೇತುವೆ ಮಣ್ಣನ್ನು ತೆರವುಗೊಳಿಸಲಾಗುತ್ತಿದೆ. ಕಲ್ಲಡ್ಕ ಹೆದ್ದಾರಿಯಲ್ಲಿ ರಸ್ತೆಯನ್ನು ಸುಸ್ಥಿತಿಯಲ್ಲಿಡಲು ಆದ್ಯತೆಯಲ್ಲಿ ಕೆಲಸ ನಡೆಯುತ್ತಿದೆ ಎಂದು ತಿಳಿಸಿದರು.
ಸಭೆಯಲ್ಲಿ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಮರಾ ಗಟ್ಟಿ, ದ.ಕ. ಜಿಪಂ ಸಿಇಒ ಡಾ.ಆನಂದ್ ಕೆ, ಪೊಲೀಸ್ ಆಯುಕ್ತ ಅನುಪಮ ಅಗ್ರವಾಲ್, ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ಸಿ.ಬಿ. ಹಾಗೂ ವಿವಿ ಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.