ಕುಡಿಯುವ ನೀರಿನ ಸಮಸ್ಯೆ: ಮುನ್ನೆಚ್ಚರಿಕೆ ವಹಿಸಲು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚನೆ

ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್
ಮಂಗಳೂರು,ಫೆ.27: ಬೇಸಿಗೆ ಕಾಲ ಪ್ರಾರಂಭವಾಗಿರುವುದರಿಂದ ದ.ಕ.ಜಿಲ್ಲೆಯಲ್ಲಿ ಕುಡಿಯುವ ನೀರು ಹಾಗೂ ಕಾಡ್ಗಿಚ್ಚು ನಿರ್ವಹಣೆ ಕುರಿತು ಮುಂಜಾಗ್ರತ ಕ್ರಮಕೈಗೊಳ್ಳಬೇಕು ಎಂದು ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಂಗಳೂರು ಮಹಾನಗರ ಪಾಲಿಕೆಗೆ ನೀರು ಸರಬರಾಜು ಮಾಡುವ ಬಂಟ್ವಾಳದ ತುಂಬೆ ಡ್ಯಾಮ್ನಲ್ಲಿ 5.70 ಮೀ. ನೀರು ಇದ್ದು, ಎಎಂಆರ್ ಅಣೆಕಟ್ಟಿನಲ್ಲಿ ನೀರಿನ ಮಟ್ಟ 18.9 ಮೀ ಇದೆ ಎಂದು ಮಹಾನಗರ ಪಾಲಿಕೆ ಅಧಿಕಾರಿಗಳು ಸಭೆಗೆ ನೀಡಿದ ಮಾಹಿತಿಗೆ ಪ್ರತಿಕ್ರಿಯೆ ವ್ಯಕ್ತಪಡಿಸಿದ ಡಿಸಿ ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಬಂದಲ್ಲಿ ಅಥವಾ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಎಲ್ಲಾ ಅಧಿಕಾರಿಗಳು ತಮ್ಮ ಹಂತದಲ್ಲಿ ವ್ಯವಸ್ಥಿತವಾಗಿ ಕ್ರಮ ವಹಿಸಲು ಹಾಗೂ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ ಸಮಸ್ಯೆಗಳನ್ನು ಪರಿಹರಿಸಲು ಸೂಚಿಸಿದರು.
ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಆಗದಂತೆ ಎಲ್ಲಾ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಅಗತ್ಯ ಬಿದ್ದರೆ ಟ್ಯಾಂಕರ್ ಮೂಲಕವೂ ನೀರು ಸರಬರಾಜು ಮಾಡಬೇಕು. ನಗರ ಪ್ರದೇಶಗಳಲ್ಲಿ ಆಯಾ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಕುಡಿಯುವ ನೀರಿನ ಸರಬರಾಜು ನಿರ್ವಹಣೆ ಮಾಡಲು ಡಿಸಿ ತಿಳಿಸಿದರು.
ಅರಣ್ಯ ಪ್ರದೇಶದಲ್ಲಿ ಬೆಂಕಿ ಅವಘಡ ತಪ್ಪಿಸಲು ರಸ್ತೆ ಬದಿಗಳ, ಕಾಡಿನ ಒಳಗಡೆ ಇರುವ ವಿದ್ಯುತ್ ಲೈನ್ಗಳು ಗಾಳಿಗೆ ತಾಗಿಕೊಂಡು ಬೆಂಕಿ ಕಿಡಿ ಹಾರದಂತೆ, ಟ್ರಾನ್ಸ್ಫಾರ್ಮರ್ಗಳಲ್ಲಿ ಉಂಟಾಗುವ ಬೆಂಕಿಯ ಕಿಡಿಗಳು ಒಣಗಿದ ಹುಲ್ಲು ಮತ್ತು ಗಿಡ ಗಂಟೆಗಳನ್ನು ಸ್ವಚ್ಛಗೊಳಿಸಲು ಜಿಲ್ಲಾಧಿಕಾರಿ ತಿಳಿಸಿದರು.
ಸಭೆಯಲ್ಲಿ ಜಿಪಂ ಸಿಇಒ ಡಾ. ಆನಂದ್ ಕೆ, ಉಪ ಅರಣ್ಯ ಸಂರಕ್ಷಣಾಧಿಕಾರಿ ಆ್ಂಯಟನಿ ಮರಿಯಪ್ಪ, ಅಪರ ಜಿಲ್ಲಾಧಿಕಾರಿ ಡಾ.ಜಿ ಸಂತೋಷ್ ಕುಮಾರ್ ಮತ್ತು ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.







