ಮಂಗಳೂರು: ರಾಜ್ಯ ಸರಕಾರಿ ನೌಕರರ ಕ್ರೀಡಾಕೂಟಕ್ಕೆ ಚಾಲನೆ

ಮಂಗಳೂರು, ಮಾ.13: ರಾಜ್ಯ ಸರಕಾರ ನೌಕರರು ತಮ್ಮ ದೈನಂದಿನ ಒತ್ತಡಗಳ ನಡುವೆಯೂ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿ ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ದ.ಕ.ಜಿಪಂ ಸಿಇಒ ಡಾ. ಆನಂದ್ ಕೆ. ಹೇಳಿದರು.
ನಗರದ ಮಂಗಳಾ ಕ್ರೀಡಾಂಗಣದಲ್ಲಿ ದ.ಕ. ಜಿಲ್ಲಾ ಮಟ್ಟದ ರಾಜ್ಯ ಸರಕಾರ ನೌಕರರ ಕ್ರೀಡಾಕೂಟದಲ್ಲಿ ಗುರುವಾರ ಧ್ವಜಾರೋಹಣ ಮಾಡಿ ಅವರು ಮಾತನಾಡಿದರು.
ಸರಕಾರಿ ನೌಕರಿಯು ಸಾರ್ವಜನಿಕ ಸೇವೆಗೆ ಒಂದು ಉತ್ತಮ ವೇದಿಕೆಯಾಗಿದೆ.ಬಡವರ, ದುರ್ಬಲರ ಸೇವೆ ಮಾಡಲು ಈ ವೃತ್ತಿಯನ್ನು ನಾವು ಪ್ರಾಮಾಣಿಕವಾಗಿ ಬಳಸಿಕೊಳ್ಳಬೇಕು ಎಂದು ಡಾ. ಆನಂದ್ ಕೆ. ಹೇಳಿದರು.
ಕೊಂಕಣಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಜೋಕಿಂ ಸ್ಟಾನ್ಲಿ ಅಲ್ವಾರಿಸ್ ಕ್ರೀಡಾಕೂಟವನ್ನು ಉದ್ಘಾಟಿಸಿ ದರು. ಮಂಗಳೂರಿನ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್, ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕ ಡಾ. ಶಿವಕುಮಾರ್, ಸರಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷರಾದ ಜಯರಾಜ್ ಜೈನ್(ಬೆಳ್ತಂಗಡಿ), ಶಿವಾನಂದ ಆಚಾರ್ಯ(ಪುತ್ತೂರು), ವಿಮಲ್ ನೆಲ್ಯಾಡಿ (ಕಡಬ), ಶಿವಪ್ರಸಾದ್ ಶೆಟ್ಟಿ (ಬಂಟ್ವಾಳ), ದೊರೆಸ್ವಾಮಿ(ಮೂಡುಬಿದಿರೆ), ನಿತಿನ್ ಪ್ರಭು (ಸುಳ್ಯ) ಉಪಸ್ಥಿತರಿದ್ದರು.
ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ನವೀನ್ ಕುಮಾರ್ ಸ್ವಾಗತಿಸಿದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಪ್ರದೀಪ್ ಡಿಸೋಜ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಘದ ಜಿಲ್ಲಾ ಕಾರ್ಯದರ್ಶಿ ಲತೇಶ್ ವಂದಿಸಿದರು. ಮೋಹನ್ ಶಿರ್ಲಾಲು ಕಾರ್ಯಕ್ರಮ ನಿರೂಪಿಸಿದರು.