ಮಂಗಳೂರು| ಸಿಎಂ ಸಿದ್ದರಾಮಯ್ಯರಿಗೆ ಕಪ್ಪು ಬಾವುಟ ಪ್ರದರ್ಶನಕ್ಕೆ ಯತ್ನ: ಬಿಜೆಪಿ ಕಾರ್ಯಕರ್ತರ ಬಂಧನ

ಮಂಗಳೂರು: ನೂತನ ಜಿಲ್ಲಾಡಳಿತ ಕೇಂದ್ರ ‘ಪ್ರಜಾ ಸೌಧ’ ಉದ್ಘಾಟನಾ ಸಮಾರಂಭಕ್ಕೆ ಮಂಗಳೂರಿಗೆ ಆಗಮಿಸುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಜೆಪಿಯ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶನಕ್ಕೆ ಯತ್ನಿಸಿ, ಬೆಂಗಾವಲಿಗೆ ಅಡ್ಡಿಪಡಿಸಿದ ಘಟನೆ ನಡೆದಿದೆ.
ಸಿಎಂ ಸಿದ್ದರಾಮಯ್ಯ ಅವರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪಡೀಲ್ನಲ್ಲಿ ನಡೆಯಲಿದ್ದ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಯೆಯ್ಯಾಡಿಯಲ್ಲಿ ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಲು ಆರಂಭಿಸಿದರು.
ಬಜ್ಪೆಯಲ್ಲಿ ನಡೆದ ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆಯಲ್ಲಿ ಉಗ್ರರ ಕೈವಾಡವಿದೆ. ಹಾಗಾಗಿ, ತನಿಖೆಯನ್ನು ಎನ್ಐಎಗೆ ವಹಿಸಬೇಕು ಹಾಗೂ ಸುಹಾಸ್ ಶೆಟ್ಟಿ ಕುಟುಂಬಕ್ಕೆ ಸರಕಾರದಿಂದ ಪರಿಹಾರ ಘೋಷಣೆ ಮಾಡಬೇಕು ಎಂದು ಬಿಜೆಪಿ ಮಂಗಳೂರು ಉತ್ತರ ಮಂಡಲ ಯುವಮೋರ್ಚಾ ಕಾರ್ಯಕರ್ತರು ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ನಡೆಸಲು ಮುಂದಾದರು.
ಈ ವೇಳೆ ತಕ್ಷಣ ಕಾರ್ಯ ಪ್ರವೃತ್ತರಾದ ಪೊಲೀಸರು, ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ.
Next Story







