ಜಿಲ್ಲಾಸ್ಪತ್ರೆಗಳಲ್ಲೇ ಮಾದಕ ವಸ್ತು ಪರೀಕ್ಷೆಗೆ ಚಿಂತನೆ: ಸಚಿವ ಗುಂಡೂರಾವ್

ಮಂಗಳೂರು: ದ.ಕ.ಜಿಲ್ಲೆಯಲ್ಲಿ ಮಾದಕ ವಸ್ತುಗಳ ಬಳಕೆ ಮತ್ತು ಮಾರಾಟ ತಡೆಯುವ ಉದ್ದೇಶದಿಂದ ಮಾದಕ ವಸ್ತುಗಳ ಪರೀಕ್ಷೆಗೆ ಬೆಂಗಳೂರಿಗೆ ಕಳುಹಿಸುವ ಬದಲು ಜಿಲ್ಲಾಸ್ಪತ್ರೆಗಳಲ್ಲೇ ಪರೀಕ್ಷೆ ನಡೆಸಲು ಚಿಂತನೆ ನಡೆಸಲಾಗುತ್ತಿದೆ ಎಂದು ರಾಜ್ಯ ಆರೋಗ್ಯ ಮತ್ತು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ನಗರದ ಪಡೀಲ್ನಲ್ಲಿರುವ ದ.ಕ.ಜಿಲ್ಲಾಧಿಕಾರಿಗಳ ಕಚೇರಿ ಪ್ರಜಾಸೌಧದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ದಿನನಿತ್ಯ ಹೊಸ ಹೊಸ ರೀತಿಯ ಮಾದಕ ವಸ್ತುಗಳು ಬರುತ್ತಿದೆ. ಅದನ್ನು ಬೆಂಗಳೂರಿಗೆ ಹೋಗಿ ಪರೀಕ್ಷೆ ಮಾಡಿಸಿಕೊಂಡು ಬರಬೇಕಾದ ಅನಿವಾರ್ಯತೆ ಇದೆ. ಇದು ವರದಿಯ ವಿಳಂಬಕ್ಕೆ ಕಾರಣವಾಗುತ್ತಿದೆ. ಈ ನಿಟ್ಟಿನಲ್ಲಿ ಜಿಲ್ಲಾಸ್ಪತ್ರೆಯಲ್ಲೇ ಆಹಾರ ಮತ್ತು ಮಾದಕ ವಸ್ತುಗಳ ಪರೀಕ್ಷೆಗೆ ಚಿಂತನೆ ಮಾಡುತ್ತಿದ್ದೇವೆ ಎಂದು ಹೇಳಿದರು.
ಕಾನೂನುಗಳನ್ನು ಮತ್ತಷ್ಟು ಬಿಗಿ ಮಾಡುವುದರೊಂದಿಗೆ ಆರೋಗ್ಯ ಮತ್ತು ಪೊಲೀಸ್ ಇಲಾಖೆ ಹಾಗೂ ವೈದ್ಯಕೀಯ ಕಾಲೇಜು, ಶಿಕ್ಷಣ ಸಂಸ್ಥೆಗಳ ಜೊತೆ ಕಾರ್ಯಕ್ರಮ ರೂಪಿಸಲಾಗುತ್ತದೆ. ಯುವಜನತೆ ಮಾದಕ ವ್ಯಸನದ ದಾಸರಾಗುತ್ತಿರುವುದು ಕಳವಳಕಾರಿ ವಿಚಾರವಾಗಿದೆ. ಈ ನಿಟ್ಟಿನಲ್ಲಿ ಶಿಕ್ಷಣ ಸಂಸ್ಥೆ ಗಳಲ್ಲಿ ಕೌನ್ಸೆಲಿಂಗ್ ಜತೆಗೆ ನೋಡಲ್ ವ್ಯಕ್ತಿಯನ್ನು ನೇಮಿಸಿಕೊಂಡು ಕಾನೂನುಗಳನ್ನು ಪರಿಣಾಮಕಾರಿ ಯಾಗಿ ಜಾರಿಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ಜಿಲ್ಲೆಯ ಮೆಡಿಕಲ್, ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಸಮಸ್ಯೆ ಅಧಿಕವಿದೆ. ಹಾಗಾಗಿ ಶಿಕ್ಷಣ ಸಂಸ್ಥೆಗಳ ಸಹಕಾರದೊಂದಿಗೆ ಮಾದಕ ದ್ರವ್ಯ ವ್ಯಸನದ ನಿರ್ಮೂಲನೆಗೆ ಪ್ರಯತ್ನಿಸಲಾಗುವುದು ಎಂದರು.
*ಕೆಂಪುಕಲ್ಲು ಮತ್ತು ಮರಳು ಗಣಿಗಾರಿಕೆಯ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ. ಸಾಕಷ್ಟು ಕಾನೂನು ತೊಡಕುಗಳಿಂದ ಬಹಳಷ್ಟು ನಷ್ಟ ಸಂಭವಿಸುತ್ತಿದೆ ಎಂದು ಸಂಬಂಧಪಟ್ಟವರು ಮನವಿ ಮಾಡಿದ್ದಾರೆ. ಇದಕ್ಕೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಮರಳು ತೆಗೆಯುವ ವಿಚಾರದಲ್ಲಿ ಕಾನೂನು ಬಾಹಿರಕ್ಕೆ ಅವಕಾಶ ನೀಡುವುದಿಲ್ಲ. ಈಗಾಗಲೇ ನಾನ್ ಸಿಆರ್ಝೆಡ್ನಲ್ಲಿ ಮರಳು ತೆಗೆಯುವ ವಿಚಾರದ ಬಗ್ಗೆ ಸಭೆಯಲ್ಲಿ ಮಾತುಕತೆ ನಡೆಸಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
*ಹಿಂದುತ್ವವಾದಿಗಖ ವಿರುದ್ಧ ಪೊಲೀಸ್ ಇಲಾಖೆ ನಡೆದುಕೊಂಡ ಕ್ರಮದ ಬಗ್ಗೆ ಮಾನವಹಕ್ಕು ಆಯೋಗವು ಮಾಹಿತಿ ಪಡೆದುಕೊಳ್ಳುತ್ತಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು ಪೊಲೀಸ್ ಕ್ರಮದ ಹಿಂದೆ ಯಾವುದೇ ದುರುದ್ದೇಶವಿಲ್ಲ. ಶಾಂತಿ ಮತ್ತು ಸೌಹಾರ್ದ ಪುನಃ ಸ್ಥಾಪಿಸಲು ಪೊಲೀಸರಿಗೆ ಅವಕಾಶ ನೀಡಬೇಕಿದೆ. ಶಾಂತಿ ಸಭೆ ನಡೆಸುವ ಕುರಿತು ಗೃಹ ಸಚಿವರೊಂದಿಗೆ ಮಾತುಕತೆ ನಡೆಸಿ ಶೀಘ್ರದಲ್ಲೇ ಶಾಂತಿ ಸಭೆಯ ದಿನ ನಡೆಸುವುದಾಗಿ ಹೇಳಿದರು.







