ಅಕ್ರಮ ಕೆಂಪುಕಲ್ಲು, ಮರಳುಗಾರಿಕೆಯನ್ನು ಬಿಜೆಪಿ ಬೆಂಬಲಿಸುವುದಿಲ್ಲ: ಸತೀಶ್ ಕುಂಪಲ

ಮಂಗಳೂ: ಅಕ್ರಮವಾಗಿ ಕೆಂಪುಕಲ್ಲು ಕೋರೆ, ಮರಳು ಗಣಿಗಾರಿಕೆಗೆ ಬಿಜೆಪಿ ಬೆಂಬಲ ನೀಡುವುದಿಲ್ಲ. ಆದರೆ ಕರ್ನಾಟಕ ಸರಕಾರ ಅಧಿಕೃತ ಪರವಾನಗಿ ನೀಡುವಲ್ಲಿ ಎಡವಿದ್ದು, ಅರ್ಜಿ ಸಲ್ಲಿಸಿದ 21 ದಿನಗಳ ಒಳಗಾಗಿ ಅನುಮತಿ ನೀಡುವಂತೆ ಎಂದು ದ.ಕ. ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಸತೀಶ್ ಕುಂಪಲ ಆಗ್ರಹಿಸಿದ್ದಾರೆ.
ನಗರದ ಬಿಜೆಪಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಈಗ ಆರು ತಿಂಗಳಾದರೂ ಪರವಾನಗಿ ಸಿಗುತ್ತಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎದುರಾಗಿರುವ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ ಬಗೆಹರಿಸಲು ವಿಫಲವಾಗಿರುವ ಸರಕಾರದ ವಿರುದ್ಧ ಬಿಜೆಪಿ ವತಿಯಿಂದ ಜಿಲ್ಲೆಯ ಎಲ್ಲ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಜುಲೈ 14ರಂದು ಪ್ರತಿಭಟನೆ ನಡೆಸಲಾಗುವುದು ಎಂದು ಸತೀಶ್ ಕುಂಪಲ ಹೇಳಿದರು.
ಕೆಂಪುಕಲ್ಲು, ಮರಳು ಕೊರತೆಯಿಂದಾಗಿ ಜಿಲ್ಲೆಯಲ್ಲಿ ಮನೆ ನಿರ್ಮಾಣ, ಕಟ್ಟಡ ನಿರ್ಮಾಣ ಕಾಮಗಾರಿ ಗಳು ಅರ್ಧಕ್ಕೆ ನಿಂತಿವೆ, ಕಾರ್ಮಿಕರು ಕೈಗೆ ಕೆಲಸ ಇಲ್ಲದೆ ತೊಂದರೆಗೆ ಸಿಲುಕಿದ್ದಾರೆ. ನಿಯಮ ಸರಳೀಕರಣ ಮಾಡುವುದಾಗಿ ಹೇಳಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ, ಭರವಸೆ ಈಡೇರಿಸುವಲ್ಲಿ ವಿಫಲವಾಗಿದೆ ಎಂದರು.
ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ಸಿಆರ್ಝೆಡ್ನಲ್ಲಿ ಎರಡು ವರ್ಷಗಳಿಂದ ಮರಳು ತೆಗೆ ಯಲು ಮರಳು ನೀತಿ ಜಾರಿಗೊಳಿಸಿಲ್ಲ. ಈ ಸಂಬಂಧ ಸಭೆಯೂ ನಡೆದಿಲ್ಲ ಎಂದರು.
ಶಾಸಕ ಡಾ. ಭರತ್ ಶೆಟ್ಟಿ ಅವರು , ಮರಳು ವ್ಯವಹಾರದಲ್ಲಿ ರಾಜಕೀಯ ಧುರೀಣರು , ಅಧಿಕಾರಿಗಳು ಶಾಮೀಲಾಗಿದ್ದಾರೆ. ಕೇರಳ ಮಾದರಿಯಲ್ಲಿ ಇಲ್ಲಿಯೂ ಕೆಂಪುಕಲ್ಲು ಅಧಿಕೃತ ಪೂರೈಕೆಗೆ ಅವಕಾಶ ನೀಡಲಿ ಎಂದರು.
ಶಾಸಕ ರಾಜೇಶ್ ನಾಯ್ಕ್ ಮಾತನಾಡಿ, ಜಿಲ್ಲೆಯ ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಉಪನಿರ್ದೇಶ ಕರ ಹುದ್ದೆ ಖಾಲಿ ಇದ್ದು, ಹಿರಿಯ ಭೂ ವಿಜ್ಞಾನಿ ಪ್ರಭಾರಿಯಾಗಿದ್ದಾರೆ. ಮರಳು ಹಾಗೂ ಕೆಂಪುಕಲ್ಲು ಸಮಸ್ಯೆ ಬಗ್ಗೆ ಹೇಳಿದರೆ ಸ್ಪಂದನೆ ಇಲ್ಲ ಎಂದು ತಿಳಿಸಿದರು.
ಮದುವೆಯಾಗುವುದಾಗಿ ನಂಬಿಸಿ, ಯುವತಿಯನ್ನು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ, ಪುತ್ತೂರಿನ ಸಂತ್ರಸ್ತೆಯ ಮನೆಗೆ ಬಿಜೆಪಿ ನಿಯೋಗ ತೆರಳಿ ಬೆಂಬಲ ನೀಡಿದೆ. ಯುವತಿ ಹಾಗೂ ಆಕೆಯ ಮಗುವಿಗೆ ನ್ಯಾಯ ಸಿಗಬೇಕು. ಆರೋಪಿ ಕೃಷ್ಣ ರಾವ್ ತಂದೆ ಜಗನ್ನಿವಾಸ ರಾವ್ ಅವರಿಗೆ ಬಿಜೆಪಿ ವತಿಯಿಂದ ನೋಟಿಸ್ ಜಾರಿಗೊಳಿಸಲಾಗಿದೆ. ನೋಟಸ್ಗೆ ಅವರು ನೀಡುವ ಉತ್ತರ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸತೀಶ್ ಹೇಳಿದರು.
ಶಾಸಕರಾದ ಹರೀಶ್ ಪೂಂಜ, ಭಾಗೀರಥಿ ಮುರುಳ್ಯ, ಪ್ರಮುಖರಾದ ಪ್ರೇಮಾನಂದ ಶೆಟ್ಟಿ, ಯತೀಶ್ ಆರ್ವಾರ್, ಮಂಜುಳಾ ರಾವ್, ಸಂಜಯ ಪ್ರಭು ಉಪಸ್ಥಿತರಿದ್ದರು.







