ಸುರತ್ಕಲ್: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಸುರತ್ಕಲ್ : ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.
ಮೂಲತಃ ಉಡುಪಿ ಜಿಲ್ಲೆಯ ಇಂದ್ರಾಳಿ ಬಳಿಯ ನಿವಾಸಿ ಸದ್ಯ ಧಾರವಾಡ ಜಿಲ್ಲೆಯ ಟೋಲ್ ನಾಕ ನಿವಾಸಿ ರಾಜೇಶ್ ನಾಯ್ಕ್ ಯಾನೆ ರಾಜ್ ಯಾನೆ ರಾಜು ಪಮಾಡಿ (48) ಬಂಧಿತ ಆರೋಪಿ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಈತನ ಮೇಲೆ ಮಂಗಳೂರು ನಗರ, ಉಡುಪಿ ಜಿಲ್ಲೆ, ಉತ್ತರ ಕನ್ನಡ ಜಿಲ್ಲೆ, ಧಾರವಾಡ ಹಾಗೂ ವಿವಿಧ ಕಡೆಗಳಲ್ಲಿ ಕೊಲೆ ಯತ್ನ, ಕಳವು, ಹಲ್ಲೆ, ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಪ್ರಕರಣಗಳಲ್ಲಿ ಭಾಗಿ ಯಾಗಿ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ ಎಂದು ತಿಳಿದು ಬಂದಿದೆ.
ಈತನ ವಿರುದ್ದ ಮಂಗಳೂರು ನಗರದ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ 4 ಕಳವು ಪ್ರಕರಣ, ಮುಲ್ಕಿ ಪೊಲೀಸ್ ಠಾಣೆಯಲ್ಲಿ 4 ಕಳವು ಪ್ರಕರಣ, ಜೈಲ್ ನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಸಮಯ ಸಹ ಖೈದಿಗಳಿಗೆ ಹಾಗೂ ಜೈಲ್ ಸಿಬ್ಬಂದಿಗೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ 2 ಪ್ರಕರಣಗಳು ಬರ್ಕೆ ಠಾಣೆಯಲ್ಲಿ ದಾಖಲಾಗಿವೆ. ಅಲ್ಲದೇ ಉಡುಪಿ ಜಿಲ್ಲೆಯ ಮಣಿಪಾಲ, ಹಿರಿಯಡ್ಕ, ಬೈಂದೂರು, ಉಡುಪಿ ನಗರ, ಕುಂದಾಪುರ, ಗಂಗೋಳ್ಳಿ, ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಹೊನ್ನಾವರ, ಧಾರವಾಡ ಜಿಲ್ಲೆಯ ಉಪನಗರ ಪೊಲೀಸ್ ಠಾಣೆಗಳಲ್ಲಿ ಕಳವು ಪ್ರಕರಣಗಳು ಸೇರಿದಂತೆ ಒಟ್ಟು 21 ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಈತನ ಮೇಲೆ ವಿವಿಧ ನ್ಯಾಯಾಲಯಗಳಲ್ಲಿ ಒಟ್ಟು 10 ವಾರಂಟ್ ಜಾರಿಯಾಗಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸದ್ಯ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.







