ಪುತ್ತೂರು: ವಿಚಾರಣೆಗೆ ಹಾಜರಾಗಲು ಕಲ್ಲಡ್ಕ ಪ್ರಭಾಕರ ಭಟ್ ಗೆ ನೋಟೀಸ್ ಜಾರಿ

ಪುತ್ತೂರು: ಸಾರ್ವಜನಿಕ ಕಾರ್ಯಕ್ರಮದಲ್ಲಿ ದ್ವೇಷ ಭಾಷಣ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅ.30ರಂದು ವಿಚಾರಣೆಗೆ ಹಾಜರಾಗಲು ಪೊಲೀಸ್ ಇಲಾಖೆ ನೋಟೀಸ್ ಜಾರಿ ಮಾಡಿದೆ.
ಈ ನಡುವೆ ಪುತ್ತೂರಿನ ದ.ಕ ಜಿಲ್ಲಾ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಮುಂದಿನ ವಿಚಾರಣೆ ವರೆಗೆ ಬಂಧನ ಸಹಿತ ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶ ನೀಡಿದೆ.
ಅ.20ರಂದು ಪುತ್ತೂರು ತಾಲೂಕಿನ ಉಪ್ಪಳಿಗೆಯಲ್ಲಿ ನಡೆದ 'ದೀಪೋತ್ಸವ' ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಮಾಡಿದ ಭಾಷಣ ಧಾರ್ಮಿಕ ದ್ವೇಷ ಪ್ರಚೋದಿಸುವ, ಮಹಿಳೆಯರ ಘನತೆಗೆ ಧಕ್ಕೆ ಉಂಟು ಮಾಡುವ ಹಾಗೂ ಸಾರ್ವಜನಿಕ ಶಾಂತಿಗೆ ಅಪಾಯ ಉಂಟು ಮಾಡುವಂತಿತ್ತು ಎಂದು ಆರೋಪಿಸಿ ಮಹಿಳಾ ಪರ ಹೋರಾಟಗಾರ್ತಿ ಈಶ್ವರಿ ಪದ್ಮುಂಜ ಪುತ್ತೂರು ಗ್ರಾಮಾಂತರ ಠಾಣೆಗೆ ನೀಡಿದ್ದರು. ದೂರಿನಂತೆ ಕಲ್ಲಡ್ಕ ಪ್ರಭಾಕರ ಭಟ್ ಹಾಗೂ ಕಾರ್ಯಕ್ರಮದ ಆಯೋಜಕರ ವಿರುದ್ಧ ಅ.25ರಂದು ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದೀಗ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ದ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಅ.30ರಂದು ಕಲಂ 35 (3 )ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ಅಡಿಯಲ್ಲಿ ವಿಚಾರಣೆಗೆ ಹಾಜರಾಗಲು ಪ್ರಭಾಕರ ಭಟ್ ಕಲ್ಲಡ್ಕ ಮನೆಗೆ ನೋಟಿಸ್ ಜಾರಿ ಮಾಡಿದೆ. ಇದರ ವಿರುದ್ಧ ಪ್ರಭಾಕರ್ ಭಟ್ ನ್ಯಾಯಾಲಯದ ಮೆಟ್ಟಿಲೇರಿದ್ದರು. ನ್ಯಾಯಾಲಯ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶ ನೀಡಿದೆ. ಮುಂದಿನ ವಿಚಾರಣೆವರೆಗೆ ಬಂಧನ ಸಹಿತ ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶದಲ್ಲಿ ಸೂಚಿಸಲಾಗಿದೆ.







