ಕ್ರೀಡಾಕೂಟಗಳಿಂದ ದೈಹಿಕ ಮತ್ತು ಮಾನಸಿಕ ಸ್ಥೈರ್ಯ ಹೆಚ್ಚಳ: ಡಾ.ಎಂ.ಎನ್.ರಾಜೇಂದ್ರ ಕುಮಾರ್

ಮಂಗಳೂರು: ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನೌಕರರ ಒಕ್ಕೂಟದ ಕ್ರೀಡಾಕೂಟವು ಶನಿವಾರ ನಗರದ ಮಂಗಳಾ ಕ್ರೀಡಾಂಗಣದಲ್ಲಿ ಜರುಗಿತು.
ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಕ್ರೀಡಾಕೂಟ ಉದ್ಘಾಟಿಸಿದರು. ಬಳಿಕ ಮಾತಾಡಿದ ಅವರು ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ ಮತ್ತು ಮಾನಸಿಕ ಸ್ಥೈರ್ಯ ಹೆಚ್ಚುತ್ತದೆ. ನೌಕರರಿಗಾಗಿ ಕ್ರೀಡಾಕೂಟ ಏರ್ಪಡಿಸಿ ಅವರಲ್ಲಿ ಹುಮ್ಮಸ್ಸು ತುಂಬುವ ಕಾರ್ಯಕ್ರಮ ಶ್ಲಾಘನೀಯ. ಸದಾಕಾಲ ಕೆಲಸದ ಒತ್ತಡದಲ್ಲಿ ಇರುವ ನೌಕರರು ಜಂಜಡವನ್ನು ಮರೆತು ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಬೇಕು ಎಂದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹ ನಿರ್ದೇಶಕ ಪ್ರದೀಪ್ ಡಿಸೋಜ, ಬ್ಯಾಂಕ್ ಉಪಾಧ್ಯಕ್ಷ ವಿನಯ್ ಕುಮಾರ್ ಸೂರಿಂಜೆ, ಕಾರ್ಯನಿರ್ವಹಣಾಧಿಕಾರಿ ಗೋಪಿನಾಥ್ ಭಟ್, ದೇವರಾಜ್ ರೈ, ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬೊಳ್ಯೊಟ್ಟು, ಒಕ್ಕೂಟದ ಉಪಾಧ್ಯಕ್ಷ ರಾಜಾರಾಮ್ ಶೆಟ್ಟಿ, ಜೋವಿನ್ ಪ್ರಕಾಶ್ ಡಿಸೋಜ ಮತ್ತಿತರರು ಉಪಸ್ಥಿತರಿದ್ದರು.
ಒಕ್ಕೂಟದ ಅಧ್ಯಕ್ಷ ಕರುಣಾಕರ ಸ್ವಾಗತಿಸಿದರು. ಬ್ಯಾಂಕ್ ಅಧ್ಯಕ್ಷರನ್ನು ನೌಕರರ ಒಕ್ಕೂಟದ ವತಿಯಿಂದ ಸನ್ಮಾನಿಸಲಾಯಿತು. ವಿವಿಧ ಕ್ರೀಡೆಗಳಲ್ಲಿ ಗೆದ್ದ ಒಕ್ಕೂಟದ ಸದಸ್ಯರಿಗೆ ಬಹುಮಾನ ವಿತರಿಸಲಾಯಿತು.







