ಸರ್ಕಾರಿ ಗೌರವಗಳೊಂದಿಗೆ ಇಂದು ಪುಣೆಯಲ್ಲಿ ಅಜಿತ್ ಪವಾರ್ ಅಂತ್ಯಕ್ರಿಯೆ

Photo Credit : PTI
ಪುಣೆ, ಜ.29: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಪಾರ್ಥಿವ ಶರೀರವನ್ನು ಪುಣೆ ಜಿಲ್ಲೆಯ ಕಟೇವಾಡಿಯಲ್ಲಿರುವ ಅವರ ನಿವಾಸಕ್ಕೆ ತರಲಾಗಿದೆ. ಗುರುವಾರ ಬೆಳಿಗ್ಗೆ 11 ಗಂಟೆಗೆ ಬಾರಾಮತಿಯ ವಿದ್ಯಾ ಪ್ರತಿಷ್ಠಾನ ಆವರಣದಲ್ಲಿ ಪೂರ್ಣ ಸರ್ಕಾರಿ ಗೌರವಗಳೊಂದಿಗೆ ಅವರ ಅಂತ್ಯಕ್ರಿಯೆ ನಡೆಯಲಿದೆ.
ಅಂತ್ಯಕ್ರಿಯೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಸೇರಿದಂತೆ ರಾಜ್ಯ ಸಚಿವ ಸಂಪುಟದ ಸದಸ್ಯರು ಭಾಗವಹಿಸಲಿದ್ದಾರೆ. ರಾಜಕೀಯ ಮೀರಿ ವಿವಿಧ ಪಕ್ಷಗಳು ಹಾಗೂ ಕ್ಷೇತ್ರಗಳ ನಾಯಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ನ್ಯಾಷನಲೀಸ್ಟ್ ಕಾಂಗ್ರೆಸ್ ಪಾರ್ಟಿ ತಿಳಿಸಿದೆ.
ಬುಧವಾರ (ಜ.28) ಪುಣೆ ಜಿಲ್ಲೆಯ ಬಾರಾಮತಿ ಸಮೀಪ ಬಾಂಬಾರ್ಡಿಯರ್ ಲಿಯರ್ಜೆಟ್–45 ವಿಮಾನ ಅಪಘಾತಕ್ಕೀಡಾಗಿ ಅಜಿತ್ ಪವಾರ್ ಸೇರಿದಂತೆ ಐವರು ಮೃತಪಟ್ಟಿದ್ದರು. ಫೆಬ್ರವರಿ 5ರಂದು ನಡೆಯಲಿರುವ ಜಿಲ್ಲಾ ಪರಿಷತ್ ಚುನಾವಣೆಯ ಪ್ರಚಾರದ ಭಾಗವಾಗಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲು ಅವರು ಮುಂಬೈನಿಂದ ಬಾರಾಮತಿಗೆ ಪ್ರಯಾಣಿಸುತ್ತಿದ್ದ ವೇಳೆ ಈ ರ್ಘಟನೆ ಸಂಭವಿಸಿತ್ತು.
ವಿಮಾನ ಅಪಘಾತದ ಕುರಿತು ತನಿಖೆ ನಡೆಸಲು ವಿಮಾನ ಅಪಘಾತ ತನಿಖಾ ಬ್ಯೂರೋ (ಎಎಐಬಿ) ತಂಡವು ಅಪಘಾತ ಸ್ಥಳಕ್ಕೆ ಭೇಟಿ ನೀಡಿ, ವಿಎಸ್ಆರ್ ವೆಂಚರ್ಗೆ ಸೇರಿದ ಲಿಯರ್ಜೆಟ್–45 ವಿಮಾನದ ತಾಂತ್ರಿಕ ಹಾಗೂ ವಿಧಿವಿಜ್ಞಾನ ಪರಿಶೀಲನೆ ನಡೆಸುತ್ತಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.







