ಜುಲೈ 18 ರ ಎನ್ ಡಿಎ ಸಭೆಗೆ ಸೇರಲು ಚಿರಾಗ್ ಪಾಸ್ವಾನ್ ಗೆ ಪತ್ರ ಬರೆದ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ
ಹೊಸದಿಲ್ಲಿ: ನರೇಂದ್ರ ಮೋದಿ ಸರಕಾರದ ವಿರುದ್ಧ ಪ್ರತಿಪಕ್ಷಗಳು ಒಂದಾಗಲು ತೀವ್ರ ಪ್ರಯತ್ನ ನಡೆಸುತ್ತಿರುವ ನಡುವೆಯೇ ಆಡಳಿತ ಪಕ್ಷ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದು, ಜುಲೈ 18ರಂದು ನಡೆಯಲಿರುವ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟದ (ಎನ್ ಡಿಎ) ಸಭೆಯಲ್ಲಿ ಲೋಕ ಜನಶಕ್ತಿ ಪಕ್ಷದ (ರಾಮ್ ವಿಲಾಸ್) ನಾಯಕ ಚಿರಾಗ್ ಪಾಸ್ವಾನ್ ಪಾಲ್ಗೊಳ್ಳುವ ಸಾಧ್ಯತೆಯಿದೆ.
ಕೇಂದ್ರ ಸಚಿವ ನಿತ್ಯಾನಂದ ರಾಯ್ ಅವರು ಶುಕ್ರವಾರ ರಾತ್ರಿ ಚಿರಾಗ್ ಪಾಸ್ವಾನ್ ಅವರನ್ನು ವಾರದಲ್ಲಿ ಎರಡನೇ ಬಾರಿಗೆ ಭೇಟಿಯಾದರು ಹಾಗೂ ಬಿಜೆಪಿ ಅಧ್ಯಕ್ಷ ಜೆ. ಪಿ. ನಡ್ಡಾ ಅವರು ಯುವ ನಾಯಕನಿಗೆ ಬರೆದ ಪತ್ರವನ್ನು ಎಲ್ ಜೆಪಿ (ಆರ್) ಹಂಚಿಕೊಂಡಿದ್ದು, ಪಾಸ್ವಾನ್ ರನ್ನು ಎನ್ ಡಿಎ ಸಭೆಯಲ್ಲಿ ಭಾಗವಹಿಸಲು ಆಹ್ವಾನಿಸಿದ್ದಾರೆ.
ಪ್ರಾದೇಶಿಕ ಪಕ್ಷವನ್ನು ಎನ್ ಡಿಎ ಪ್ರಮುಖ ಘಟಕವೆಂದು ಬಣ್ಣಿಸಿದ ನಡ್ಡಾ ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರದ ಬಡವರ ಅಭಿವೃದ್ಧಿ ಮತ್ತು ಕಲ್ಯಾಣಕ್ಕಾಗಿ ಪ್ರಮುಖ ಪಾಲುದಾರರಾಗಿದ್ದಾರೆ ಎಂದರು.
2020 ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಪ್ರಚಾರಕ್ಕಾಗಿ ಬಿಹಾರದಲ್ಲಿ ಮೈತ್ರಿಯಿಂದ ಹೊರನಡೆದ ನಂತರ ದಿವಂಗತ ದಲಿತ ನಾಯಕ ರಾಮ್ ವಿಲಾಸ್ ಪಾಸ್ವಾನ್ ಅವರ ಪುತ್ರ ಚಿರಾಗ್ ಪಾಸ್ವಾನ್ ಅವರನ್ನು ಮತ್ತೆ ಎನ್ ಡಿಎ ತೆಕ್ಕೆಗೆ ತರಲು ಬಿಜೆಪಿ ತಂತ್ರ ರೂಪಿಸುತ್ತಿದೆ.