ಸಾಮಾಜಿಕ ಜಾಲತಾಣ, ಡಿಜಿಟಲ್ ವೇದಿಕೆಗಳ ಮೇಲೆ ಕಣ್ಗಾವಲಿಡುವಂತೆ ರಾಜ್ಯಗಳಿಗೆ ನಿರ್ದೇಶಿಸಿದ ಕೇಂದ್ರ ಗೃಹ ಸಚಿವಾಲಯ
ʼದೇಶ ವಿರೋಧಿ ಪ್ರಚಾರʼ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚನೆ

Photo credit: PTI
ಹೊಸದಿಲ್ಲಿ : ಆಪರೇಷನ್ ಸಿಂಧೂರ ಕಾರ್ಯಾಚರಣೆ ಬೆನ್ನಲ್ಲೇ ಸಾಮಾಜಿಕ ಮತ್ತು ಡಿಜಿಟಲ್ ವೇದಿಕೆಗಳಲ್ಲಿ ದೇಶ ವಿರೋಧಿ ಪ್ರಚಾರ ಮತ್ತು ನಕಲಿ ಸುದ್ದಿಗಳ ಮೇಲೆ ಕಣ್ಗಾವಲು ತೀವ್ರಗೊಳಿಸಬೇಕು ಎಂದು ಕೇಂದ್ರ ಗೃಹ ಸಚಿವಾಲಯ ಎಲ್ಲಾ ರಾಜ್ಯಗಳಿಗೆ ನಿರ್ದೇಶನ ನೀಡಿದೆ. ಇದಲಲ್ಲದೆ ತಪ್ಪು ಮಾಹಿತಿಯನ್ನು ಹರಡುವವರ ವಿರುದ್ಧ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದೆ,
ʼಭಯೋತ್ಪಾದಕರ ನೆಲೆಗಳ ಮೇಲೆ ಭಾರತ ಕ್ಷಿಪಣಿ ದಾಳಿ ನಡೆಸಿದ ನಂತರ ಪಾಕಿಸ್ತಾನವು ವ್ಯಾಪಕ ತಪ್ಪು ಮಾಹಿತಿ ಅಭಿಯಾನ ನಡೆಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಈ ನಿರ್ದೇಶನ ನೀಡಲಾಗಿದೆ. ದೇಶದ ಯಾವುದೇ ಭಾಗದಲ್ಲಿ ಅಥವಾ ವಿದೇಶಗಳಲ್ಲಿ ಭಾರತದ ವಿರುದ್ಧ ನಕಲಿ ಪ್ರಚಾರವನ್ನು ಮಾಡುವ ಸಾಮಾಜಿಕ ಮಾಧ್ಯಮ ಖಾತೆಗಳನ್ನು ತಕ್ಷಣವೇ ನಿರ್ಬಂಧಿಸುವಂತೆʼ ಗೃಹ ಸಚಿವಾಲಯ ರಾಜ್ಯಗಳಿಗೆ ನಿರ್ದೇಶನ ನೀಡಿದೆ.
ಇದಲ್ಲದೆ ಗಡಿ ಪ್ರದೇಶಗಳಲ್ಲಿ ಸ್ಥಳೀಯ ಆಡಳಿತ, ಸಶಸ್ತ್ರ ಪಡೆಗಳು ಮತ್ತು ಅರೆಸೈನಿಕ ಘಟಕಗಳ ನಡುವೆ ನಿಕಟ ಸಮನ್ವಯದ ಅಗತ್ಯವಿದೆ ಎಂದು ಗೃಹ ಸಚಿವಾಲಯ ಹೇಳಿದೆ.
ಮಾಹಿತಿ ತಂತ್ರಜ್ಞಾನ ಕಾಯ್ದೆ- 2000ರ ಸೆಕ್ಷನ್ 69A ಅಡಿಯಲ್ಲಿ ರಾಷ್ಟ್ರೀಯ ಭದ್ರತೆ ಅಥವಾ ಸಾರ್ವಜನಿಕ ಸುವ್ಯವಸ್ಥೆಯ ಹಿತದೃಷ್ಟಿಯಿಂದ ಆನ್ಲೈನ್ ವಿಷಯಕ್ಕೆ ನಿರ್ಬಂಧಿಸುವ ಅಧಿಕಾರ ಸರಕಾರಕ್ಕೆ ಇದೆ.





