ಪೊಲೀಸ್ ಠಾಣೆಗಳಲ್ಲಿ ಕಾರ್ಯನಿರ್ವಹಿಸದ ಸಿಸಿಟಿವಿ : ಕಸ್ಟಡಿ ಸಾವು ಕುರಿತ ವರದಿ ಬೆನ್ನಲ್ಲೇ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡ ಸುಪ್ರೀಂ ಕೋರ್ಟ್

Photo credit: PTI
ಹೊಸದಿಲ್ಲಿ: ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳು ಕಾರ್ಯನಿರ್ವಹಿಸುತ್ತಿಲ್ಲ ಎಂಬ ವರದಿಯ ಬೆನ್ನಲ್ಲೇ ಸುಪ್ರೀಂ ಕೋರ್ಟ್ ಗುರುವಾರ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಪ್ರಕರಣ ದಾಖಲಿಸಿಕೊಂಡಿದೆ.
ಕಳೆದ 7 ರಿಂದ 8 ತಿಂಗಳ ಅವಧಿಯಲ್ಲಿ ಪೊಲೀಸ್ ಕಸ್ಟಡಿಯಲ್ಲಿ 11 ಮಂದಿ ಮೃತಪಟ್ಟಿದ್ದಾರೆ ಎಂದು ʼದೈನಿಕ್ ಭಾಸ್ಕರ್ʼ ಪತ್ರಿಕೆಯಲ್ಲಿ ಬಂದ ವರದಿಯ ಆಧಾರದ ಮೇಲೆ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು, ʼಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿಗಳ ಕೊರತೆ' ಎಂಬ ಶೀರ್ಷಿಕೆಯಡಿ ಪ್ರಕಟವಾದ ವರದಿಯನ್ನು ಪರಿಗಣಿಸಿ ಸ್ವಯಂಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ಹೂಡಲು ನಿರ್ದೇಶಿಸುತ್ತಿರುವುದಾಗಿ ಹೇಳಿದೆ.
2020ರಲ್ಲಿ ನ್ಯಾಯಮೂರ್ತಿಗಳಾದ ರೋಹಿಂಟನ್ ಫಾಲಿ ನಾರಿಮನ್, ಕೆ.ಎಂ. ಜೋಸೆಫ್ ಮತ್ತು ಅನಿರುದ್ಧ ಬೋಸ್ ಅವರಿದ್ದ ಪೀಠ ನೀಡಿದ ಮಹತ್ವದ ತೀರ್ಪಿನಲ್ಲಿ, ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಅಳವಡಿಸುವುದನ್ನು ಸುಪ್ರೀಂ ಕೋರ್ಟ್ ಕಡ್ಡಾಯಗೊಳಿಸಿತ್ತು.
ಆ ತೀರ್ಪಿನಲ್ಲಿ, ದೇಶಾದ್ಯಂತ ಪ್ರತಿಯೊಂದು ಪೊಲೀಸ್ ಠಾಣೆಗಳಲ್ಲಿ ರಾತ್ರಿ ವೇಳೆ ಅಥವಾ ಕಡಿಮೆ ಬೆಳಕಿನಲ್ಲಿಯೂ ಸ್ಪಷ್ಟವಾದ ಚಿತ್ರಗಳನ್ನು ಸೆರೆಹಿಡಿಯಲು ಸಹಾಯ ಮಾಡುವ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲು ನ್ಯಾಯಾಲಯ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಆದೇಶಿಸಿತ್ತು.







