ಚುನಾವಣಾ ಆಯೋಗ ಬಿಜೆಪಿ ಸರಕಾರದ ಸಹಾಯಕನಂತೆ ವರ್ತಿಸುತ್ತಿದೆ: ಸಿಪಿಎಂ ಆರೋಪ

ಎಂ.ಎ.ಬೇಬಿ - Photo : indiatoday
ತಿರುವನಂತಪುರ, ಆ.10: ಭಾರತದ ಚುನಾವಣಾ ಆಯೋಗ(ಇಸಿಐ) ತನ್ನ ಸಾಂವಿಧಾನಿಕ ಸಂಸ್ಥೆಯ ಸ್ಥಾನಮಾನ ಮರೆತು ಕೇಂದ್ರದಲ್ಲಿರುವ ಬಿಜೆಪಿ ಸರಕಾರದ ಸಹಾಯಕನಂತೆ ವರ್ತಿಸುತ್ತಿದೆ ಎಂದು ಸಿಪಿಐ(ಎಂ)ನ ಪ್ರಧಾನ ಕಾರ್ಯದರ್ಶಿ ಎಂ.ಎ.ಬೇಬಿ ರವಿವಾರ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಎಂ.ಎ.ಬೇಬಿ, ಕಳೆದ ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ಪ್ರಕಟಿಸಿದ ಮತದಾರರ ಪಟ್ಟಿಯ ಅಕ್ರಮಗಳ ಬಗ್ಗೆ ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಸ್ಪೋಟಕ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ ಎಂದರು.
ಸುಪ್ರೀಂ ಕೋರ್ಟ್ನ ಸಲಹೆಗಳನ್ನು ಪರಿಗಣಿಸದೆ, ಬಿಜೆಪಿ ಸರಕಾರ ಚುನಾವಣಾ ಆಯೋಗದ ವಿವಿಧ ಹುದ್ದೆಗಳಿಗೆ ತಮಗೆ ನಿಷ್ಠರಾದವರನ್ನು ನಿಯೋಜಿಸಿದೆ. ಈಗ ಅವರು ವಂಚನೆಯಲ್ಲಿ ತೊಡಗಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಒಂದೆಡೆ ಅವರು ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನೆಪದಲ್ಲಿ ಅರ್ಹ ಮತದಾರರ ಹೆಸರನ್ನು ಅಳಿಸುತ್ತಿದ್ದಾರೆ. ಇನ್ನೊಂದೆಡೆ ಒಂದು ಸ್ಥಳದಲ್ಲಿ ಎರಡು ದಿನಗಳಿಗಿಂತ ಹೆಚ್ಚು ನೆಲಸದೇ ಇರುವವರನ್ನು ಮತದಾರರ ಪಟ್ಟಿಯಲ್ಲಿ ಸೇರಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.
ಒಂದು ನಿರ್ದಿಷ್ಟ ಕ್ಷೇತ್ರದಲ್ಲಿ ಮತದಾನದ ಹಕ್ಕು ಪಡೆಯಬೇಕಾದರೆ, ಒಬ್ಬ ವ್ಯಕ್ತಿ ಆರು ತಿಂಗಳ ಕಾಲ ಒಂದು ಸ್ಥಳದ ನಿವಾಸಿಯಾಗಿರಬೇಕು ಎಂಬ ನಿಯಮವನ್ನು ಅನುಸರಿಸುತ್ತಿಲ್ಲ ಎಂದು ಅವರು ಹೇಳಿದ್ದಾರೆ.
ಕಳೆದ ಲೋಕಸಭೆ ಚುನಾವಣೆಗೆ ಮುನ್ನ ಕೇರಳದ ತ್ರಿಶೂರ್ ಕ್ಷೇತ್ರದಲ್ಲಿ ಬಿಜೆಪಿ ಮತದಾರರ ಪಟ್ಟಿಗೆ ಸುಮಾರು 30 ಸಾವಿರ ನಕಲಿ ಮತದಾರರನ್ನು ಸೇರಿಸಿರುವ ಬಗ್ಗೆ ತಾನು ಮಾಹಿತಿ ಸ್ವೀಕರಿಸಿದ್ದೇನೆ ಎಂದು ಅವರು ತಿಳಿಸಿದ್ದಾರೆ.
ತ್ರಿಶೂರು ಲೋಕಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಸಮೀಪದ ಸ್ಥಳಗಳ ಹಲವು ವ್ಯಕ್ತಿಗಳ ಹೆಸರನ್ನು ಸೇರಿಸಲಾಗಿದೆ ಎಂದು ಆರೋಪಿಸಲಾಗಿದ್ದು, ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದಿದ್ದಾರೆ.
ತ್ರಿಶೂರ್ ಲೋಕಸಭಾ ಕ್ಷೇತ್ರದಲ್ಲಿ ಸುರೇಶ್ ಗೋಪಿ ಅವರು ಜಯ ಗಳಿಸಿದ್ದರು. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಕೇರಳದಲ್ಲಿ ಗೆಲುವು ಗಳಿಸುತ್ತಿರುವುದು ಇದೇ ಮೊದಲು.







