ಗಣರಾಜ್ಯೋತ್ಸವಕ್ಕೂ ಮುನ್ನ ದಿಲ್ಲಿಯಲ್ಲಿ ಅಶಾಂತಿ ಸೃಷ್ಟಿಸುವ ಬೆದರಿಕೆ: ಗುರುಪತ್ವಂತ್ ಸಿಂಗ್ ಪನ್ನೂನ್ ವಿರುದ್ಧ ಎಫ್ಐಆರ್

ಗುರುಪತ್ವಂತ್ ಸಿಂಗ್ ಪನ್ನೂನ್ | Photo Credit ; PTI \ AP
ಹೊಸದಿಲ್ಲಿ: ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಅಶಾಂತಿ ಸೃಷ್ಟಿಸಲಾಗುವುದು ಎಂದು ಬೆದರಿಕೆ ಒಡ್ಡಿರುವ ಹಾಗೂ ಸಿಖ್ಸ್ ಫಾರ್ ಜಸ್ಟೀಸ್ ಸಂಘಟನೆಯ ಗುರುಪತ್ವಂತ್ ಸಿಂಗ್ ಪನ್ನೂನ್ ವಿರುದ್ಧ ದಿಲ್ಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ ಎಂದು ಶುಕ್ರವಾರ ಅಧಿಕಾರಿಗಳು ತಿಳಿಸಿದ್ದಾರೆ.
ಗುರುಪತ್ವಂತ್ ಸಿಂಗ್ ಪನ್ನೂನ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್ಗಳಡಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಅವರು ಹೇಳಿದರು.
ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವ ಸಂಭ್ರಮಾಚರಣೆಗೆ ಮುನ್ನ ದಿಲ್ಲಿಯಲ್ಲಿ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆಯನ್ನು ಭಂಗಗೊಳಿಸಲಾಗುವುದು ಎಂದು ಪನ್ನೂನ್ ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ ಬಿಡುಗಡೆಗೊಳಿಸಿದ ಬಳಿಕ ಆತನ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದಿಲ್ಲಿಯಲ್ಲಿ ದೊಡ್ಡ ಮಟ್ಟದ ಅಶಾಂತಿ ಸೃಷ್ಟಿಸುವ ಉದ್ದೇಶದಿಂದ ಸ್ಲೀಪರ್ ಸೆಲ್ಗಳು ವಾಯುವ್ಯ ದಿಲ್ಲಿಯ ರೋಹಿಣಿ ಹಾಗೂ ನೈರುತ್ಯ ದಿಲ್ಲಿಯ ದಾಬ್ರಿ ಸೇರಿದಂತೆ ನಗರದ ವಿವಿಧ ಭಾಗಗಳಲ್ಲಿ ಖಲಿಸ್ತಾನ ಪರ ಭಿತ್ತಿ ಚಿತ್ರಗಳನ್ನು ಅಂಟಿಸಿದ್ದಾರೆ ಎಂದು ಆ ವೀಡಿಯೊದಲ್ಲಿ ಪನ್ನೂನ್ ಹೇಳಿಕೊಂಡಿದ್ದಾನೆ.





