ಎಪಿಜೆ ಅಬ್ದುಲ್ ಕಲಾಂ ಬಗ್ಗೆ ಅವಹೇಳನಕಾರಿ ಹೇಳಿಕೆ: ಯತಿ ನರಸಿಂಹಾನಂದ ಸರಸ್ವತಿ ವಿರುದ್ಧ ಎಫ್ಐಆರ್

ಯತಿ ನರಸಿಂಹಾನಂದ (PTI)
ಗಾಝಿಯಾಬಾದ್: ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಅವರ ಬಗ್ಗೆ ಅವಮಾನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ವಿವಾದಾತ್ಮಕ ಅರ್ಚಕ ಯತಿ ನರಸಿಂಹಾನಂದ ವಿರುದ್ಧ ಶನಿವಾರ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿವಾದಾತ್ಮಕ ಹೇಳಿಕೆಗಳಿಗೆ ಪದೇ ಪದೇ ಸುದ್ದಿಯಾಗುತ್ತಿರುವ ಯತಿ ನರಸಿಂಗಾನಂದ್ ಈ ಹಿಂದೆಯೂ ಹಲವು ಬಾರಿ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದರು.
ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ವಿಡಿಯೋ ಕ್ಲಿಪ್ ಆಧರಿಸಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಅಜಯ್ ಕುಮಾರ್ ಮಿಶ್ರಾ ತಿಳಿಸಿದ್ದಾರೆ.
ಯತಿ ನರಸಿಂಹಾನಂದ ಮಾಜಿ ರಾಷ್ಟ್ರಪತಿ ಹಾಗೂ ಮುಸ್ಲಿಮರ ಬಗ್ಗೆ ಆಕ್ಷೇಪಾರ್ಹ ಭಾಷೆಯನ್ನು ಬಳಸಿದ್ದಾರೆ, ಇದು ದ್ವೇಷ ಹರಡಲು ಮತ್ತು, ಕೋಮು ಸೌಹಾರ್ದತೆಗೆ ಅಡ್ಡಿಪಡಿಸುತ್ತದೆ ಎಂದು ಮಿಶ್ರಾ ಹೇಳಿದ್ದಾರೆ.
ವಿಡಿಯೋ ಆಧರಿಸಿ, ಸಬ್ ಇನ್ಸ್ಪೆಕ್ಟರ್ ಪ್ರಶಾಂತ್ ಕುಮಾರ್ ಗೌತಮ್ ಅವರು ವೇವ್ ಸಿಟಿ ಪೊಲೀಸ್ ಠಾಣೆಯಲ್ಲಿ ಯತಿ ವಿರುದ್ಧ ದೂರು ದಾಖಲಿಸಿದ್ದಾರೆ, ಶನಿವಾರ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.





