ನೇಪಾಳದಲ್ಲಿನ ಬೆಳವಣಿಗೆಗಳ ಮೇಲೆ ಸೂಕ್ಷ್ಮನಿಗಾ: ಭಾರತ ಸರಕಾರ

PC : PTI
ಹೊಸದಿಲ್ಲಿ,ಸೆ.9: ಸಾಮಾಜಿಕ ಮಾಧ್ಯಮಗಳನ್ನು ಸರಕಾರವು ನಿಷೇಧಿಸಿದ್ದನ್ನು ವಿರೋಧಿಸಿ ಹಿಂಸಾತ್ಮಕ ಪ್ರತಿಭಟನೆಗಳ ಬಳಿಕ ನೇಪಾಳದಲ್ಲಿಯ ಅಶಾಂತಿ ಕುರಿತು ಭಾರತವು ಮಂಗಳವಾರ ತೀವ್ರ ಕಳವಳವನ್ನು ವ್ಯಕ್ತಪಡಿಸಿದೆ.
ಸೋಮವಾರ ನಡೆದ ಪ್ರತಿಭಟನೆಗಳಲ್ಲಿ ಕನಿಷ್ಠ 19 ಜನರು ಮೃತಪಟ್ಟಿದ್ದು,300ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ.
‘ನಿನ್ನೆಯಿಂದ ನೇಪಾಳದಲ್ಲಿನ ಬೆಳವಣಿಗೆಗಳನ್ನು ನಾವು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಅನೇಕ ಯುವಜೀವಗಳ ನಷ್ಟದಿಂದ ನಾವು ತೀವ್ರ ದುಃಖಿತರಾಗಿದ್ದೇವೆ’ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.
ಸಂಯಮವನ್ನು ಕಾಯ್ದುಕೊಳ್ಳುವಂತೆ ಮತ್ತು ಶಾಂತಿಯುತ ಮಾತುಕತೆಗಳ ಮೂಲಕ ಸಮಸ್ಯೆಯನ್ನು ಪರಿಹರಿಸುವಂತೆ ಎಲ್ಲ ರಾಜಕೀಯ ಪಕ್ಷಗಳಿಗೆ ಭಾರತವು ಆಗ್ರಹಿಸಿದೆ.
‘ನಿಕಟ ಮಿತ್ರ ಮತ್ತು ನೆರೆಯ ದೇಶವಾಗಿ ಎಲ್ಲ ಸಮಸ್ಯೆಗಳನ್ನು ಶಾಂತಿಯುತ ಮಾರ್ಗಗಳ ಮೂಲಕ ಬಗೆಹರಿಸಲಾಗುವುದು ಎಂದು ನಾವು ಆಶಿಸಿದ್ದೇವೆ’ ಎಂದು ವಿದೇಶಾಂಗ ಸಚಿವಾಲಯವು ಹೇಳಿದೆ.
ಕಠ್ಮಂಡು ಮತ್ತು ಇತರ ಹಲವಾರು ನಗರಗಳಲ್ಲಿ ಕರ್ಫ್ಯೂ ಹೇರಿರುವದರಿಂದ ಎಚ್ಚರಿಕೆಯಿಂದ ಇರುವಂತೆ ಮತ್ತು ಸ್ಥಳೀಯ ಅಧಿಕಾರಿಗಳ ಸೂಚನೆಗಳನ್ನು ಪಾಲಿಸುವಂತೆ ಸಚಿವಾಲಯವು ನೇಪಾಳದಲ್ಲಿರುವ ಭಾರತೀಯ ಪ್ರಜೆಗಳಿಗೆ ಸೂಚಿಸಿದೆ.







