"ನನ್ನನ್ನು ಕ್ಷಮಿಸಿ": ಮಣಿಪುರ ಹಿಂಸಾಚಾರಕ್ಕೆ ಕ್ಷಮೆಯಾಚಿಸಿದ ಮುಖ್ಯಮಂತ್ರಿ ಬಿರೇನ್ ಸಿಂಗ್

ಎನ್ ಬಿರೇನ್ ಸಿಂಗ್ | PC : PTI
ಇಂಫಾಲ: ಕಳೆದ ವರ್ಷ ಪ್ರಾರಂಭವಾದ ಜನಾಂಗೀಯ ಘರ್ಷಣೆಯಿಂದಾಗಿ ಈಶಾನ್ಯ ರಾಜ್ಯದಲ್ಲಿ ಸಂಭವಿಸಿದ ಬೆಳವಣಿಗೆಗಳಿಗೆ ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಮಂಗಳವಾರ “ನನ್ನನ್ನು ಕ್ಷಮಿಸಿ” ಎಂದು ಕ್ಷಮೆಯಾಚಿಸಿದ್ದಾರೆ.
ಈ ವರ್ಷವು ಆಶಾದಾಯಕ ಟಿಪ್ಪಣಿಯಲ್ಲಿ ಕೊನೆಗೊಳ್ಳುತ್ತದೆ ಮತ್ತು 2025 ರಲ್ಲಿ ರಾಜ್ಯವು ಸಹಜ ಸ್ಥಿತಿಗೆ ಮರಳುತ್ತದೆ ಎಂದು ಆಶಿಸಿದ್ದೇನೆ ಎಂದು ಮುಖ್ಯಮಂತ್ರಿ ಬಿರೇನ್ ಸಿಂಗ್ ಹೇಳಿದ್ದಾರೆ.
"ಈ ಇಡೀ ವರ್ಷ ಅತ್ಯಂತ ದುರದೃಷ್ಟಕರವಾಗಿತ್ತು. ಕಳೆದ ಮೇ 3 ರಿಂದ ಇಂದಿನವರೆಗೆ ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ನಾನು ರಾಜ್ಯದ ಜನರಲ್ಲಿ ಕ್ಷಮೆಯಾಚಿಸುತ್ತೇನೆ. ಅನೇಕ ಜನರು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿದ್ದಾರೆ. ಅನೇಕ ಜನರು ತಮ್ಮ ಮನೆಗಳನ್ನು ತೊರೆದಿದ್ದಾರೆ. ಈ ಬಗ್ಗೆ ನನಗೆ ವಿಷಾದವಿದೆ. ಆದರೆ ಕಳೆದ ಮೂರ್ನಾಲ್ಕು ತಿಂಗಳ ಶಾಂತಿಯತ್ತ ಪ್ರಗತಿಯನ್ನು ಕಂಡ ನಂತರ 2025 ರ ವೇಳೆಗೆ ರಾಜ್ಯದಲ್ಲಿ ಸಹಜ ಸ್ಥಿತಿ ಮರಳುತ್ತದೆ ಎಂದು ನಾನು ಆಶಿಸಿದ್ದೇನೆ, ”ಎಂದು ಮುಖ್ಯಮಂತ್ರಿ ಬಿರೇನ್ ಸಿಂಗ್ ಹೇಳಿದ್ದಾರೆ.
"ಏನೇ ಸಂಭವಿಸಿದ್ದರೂ, ನೀವು ಹಿಂದಿನ ಎಲ್ಲಾ ತಪ್ಪುಗಳನ್ನು ಕ್ಷಮಿಸಬೇಕು ಮತ್ತು ಮರೆತುಬಿಡಬೇಕು. ನಾವು ಶಾಂತಿಯುತ ಮತ್ತು ಸಮೃದ್ಧ ಮಣಿಪುರದ ಕಡೆಗೆ ಹೊಸ ಜೀವನವನ್ನು ಪ್ರಾರಂಭಿಸಬೇಕು. ಮಣಿಪುರದ ಎಲ್ಲಾ 35 ಬುಡಕಟ್ಟು ಜನಾಂಗದವರು ಸಾಮರಸ್ಯದಿಂದ ಬದುಕಬೇಕು ಎಂದು ರಾಜ್ಯದ ಎಲ್ಲಾ ಸಮುದಾಯಗಳಿಗೆ ನಾನು ಮನವಿ ಮಾಡಲು ಬಯಸುತ್ತೇನೆ” ಎಂದು ಅವರು ಹೇಳಿದ್ದಾರೆ.
ಮಣಿಪುರದಲ್ಲಿ ಕಳೆದ ವರ್ಷ ಮೇ ತಿಂಗಳಿನಿಂದ ನಡೆಯುತ್ತಿರುವ ಹಿಂಸಾಚಾರವು 180 ಕ್ಕೂ ಹೆಚ್ಚು ಜೀವಗಳನ್ನು ಬಲಿ ತೆಗೆದುಕೊಂಡಿದೆ. ಪರಿಶಿಷ್ಟ ಪಂಗಡದ (ST) ಸ್ಥಾನಮಾನಕ್ಕಾಗಿ ಮೈತೈ ಸಮುದಾಯದ ಬೇಡಿಕೆ ಮತ್ತು ಬುಡಕಟ್ಟು ಕುಕಿಗಳ ವಿರೋಧದಿಂದಾಗಿ ಅಲ್ಲಿ ಹಿಂಸಾಚಾರ ಭುಗಿಲೆದ್ದಿತು.
ಮಣಿಪುರದ ಜನಸಂಖ್ಯೆಯ ಶೇಕಡ 53 ರಷ್ಟಿರುವ ಮೈಥೈಗಳು ಇಂಫಾಲ್ ಕಣಿವೆಯಲ್ಲಿ ಹೆಚ್ಚಾಗಿ ವಾಸಿಸುತ್ತಿದ್ದಾರೆ. ನಾಗಾಗಳು ಮತ್ತು ಕುಕಿಗಳು ಸೇರಿದಂತೆ ಆದಿವಾಸಿಗಳು ಜನಸಂಖ್ಯೆಯ ಶೇಕಡಾ 40 ರಷ್ಟಿದ್ದಾರೆ. ಅವರು ಮುಖ್ಯವಾಗಿ ಬೆಟ್ಟ ಪ್ರದೇಶಗಳಲ್ಲಿ ವಾಸಿಸುತ್ತಿದ್ದಾರೆ.







