ಹೊಸದಿಲ್ಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ ಪ್ರಕರಣ | 33 ಸಂತ್ರಸ್ತ ಕುಟುಂಬಗಳಿಗೆ 2.01 ಕೋಟಿ ರೂ. ಪಾವತಿ: ಕೇಂದ್ರ ಸರಕಾರ

PC : PTI
ಹೊಸದಿಲ್ಲಿ: ಹೊಸದಿಲ್ಲಿ ರೈಲು ನಿಲ್ದಾಣದಲ್ಲಿ ಫೆಬ್ರವರಿ 15ರಂದು ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟ ಅಥವಾ ಗಾಯಗೊಂಡವರ 33 ಕುಟುಂಬಗಳಿಗೆ ಒಟ್ಟು 2.01 ಕೋಟಿ ರೂ. ಪರಿಹಾರ ನೀಡಲಾಗಿದೆ ಎಂದು ಸರಕಾರ ಬುಧವಾರ ರಾಜ್ಯಸಭೆಗೆ ಮಾಹಿತಿ ನೀಡಿದೆ.
‘‘ಮೃತಪಟ್ಟವರ ಕುಟುಂಬಕ್ಕೆ ತಲಾ 10 ಲಕ್ಷ ರೂ., ಗಂಭೀರ ಗಾಯಗೊಂಡವರ ಕುಟುಂಬಕ್ಕೆ ತಲಾ 2.50 ಲಕ್ಷ ರೂ. ಹಾಗೂ ಸಣ್ಣಪುಟ್ಟ ಗಾಯಗಳಾದವರಿಗೆ ತಲಾ 1 ಲಕ್ಷ ರೂ. ಪರಿಹಾರ ನೀಡಲಾಗಿದೆ’’ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ರೂಪದ ಪ್ರತಿಕ್ರಿಯೆಯಲ್ಲಿ ತಿಳಿಸಿದ್ದಾರೆ.
ಉತ್ತರಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ತೆರಳುತ್ತಿರುವ ಭಾರೀ ಸಂಖ್ಯೆಯ ಭಕ್ತರ ಭಾರೀ ದಟ್ಟಣೆ ನಡುವೆ ಫೆಬ್ರವರಿ 15ರಂದು ಸಂಜೆ ಹೊಸದಿಲ್ಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ ಸಂಭವಿಸಿತ್ತು.
ಸಂಸತ್ತಿನಲ್ಲಿ ತನ್ನ ಪ್ರತಿಕ್ರಿಯೆಯಲ್ಲಿ ವೈಷ್ಣವ್ ಅವರು ಮೃತಪಟ್ಟವರ ಹಾಗೂ ಗಾಯಗೊಂಡವರ ಸಂಖ್ಯೆಯನ್ನು ನೀಡಿಲ್ಲ. ಆದರೆ, ಘಟನೆಯ ನಂತರ ಅಧಿಕಾರಿಗಳು ಕಾಲ್ತುಳಿತದಲ್ಲಿ 18 ಮಂದಿ ಮೃತಪಟ್ಟಿದ್ದಾರೆ ಹಾಗೂ 15 ಮಂದಿ ಗಾಯಗೊಂಡಿದ್ದಾರೆ ಎಂದು ಹೇಳಿದ್ದರು.
ಈ ಘಟನೆ ಕುರಿತು ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ ಎಂದು ಅವರು ಹೇಳಿದ್ದರು.