ಆಪ್ ನ ಮನೀಶ್ ಸಿಸೋಡಿಯಾ ಹಾಗೂ ಸತ್ಯೇಂದ್ರ ಜೈನ್ ವಿರುದ್ಧ ಎಫ್ಐಆರ್ ದಾಖಲಿಸಲು ರಾಷ್ಟ್ರಪತಿ ಅನುಮತಿ
1,300 ಕೋಟಿ ರೂ. ಮೊತ್ತದ ತರಗತಿ ಕೋಣೆಗಳ ನಿರ್ಮಾಣ ಕಾಮಗಾರಿ ಹಗರಣ

ಹೊಸದಿಲ್ಲಿ: ದಿಲ್ಲಿ ಸರಕಾರಿ ಶಾಲೆಗಳಲ್ಲಿನ ತರಗತಿ ಕೋಣೆ ನಿರ್ಮಾಣ ಕಾಮಗಾರಿಗಳಲ್ಲಿ ನಡೆದಿದೆಯೆನ್ನಲಾದ 1,300 ಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ಆಪ್ ನಾಯಕರಾದ ಮನೀಶ್ ಸಿಸೋಡಿಯಾ ಹಾಗೂ ಸತ್ಯೇಂದ್ರ ಜೈನ್ ವಿರುದ್ಧ ಪ್ರಾಥಮಿಕ ಮಾಹಿತಿ ವರದಿ ದಾಖಲಿಸಿಕೊಳ್ಳಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅನುಮೋದನೆ ನೀಡಿದ್ದಾರೆ ಎಂದು ವರದಿಯಾಗಿದೆ.
2022ರಲ್ಲಿ ಈ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಬೇಕು ಎಂದು ಶಿಫಾರಸು ಮಾಡಿದ್ದ ದಿಲ್ಲಿ ಸರಕಾರದ ವಿಚಕ್ಷಣಾ ನಿರ್ದೇಶನಾಲಯ, ಈ ಕುರಿತು ಮುಖ್ಯಂ ಕಾರ್ಯದರ್ಶಿಗಳಿಗೆ ವರದಿಯನ್ನೂ ಸಲ್ಲಿಸಿತ್ತು.
ಅರವಿಂದ್ ಕೇಜ್ರಿವಾಲ್ ಸರಕಾರದಲ್ಲಿ ಸಚಿವರಾಗಿದ್ದ ಮನೀಶ್ ಸಿಸೋಡಿಯಾ ಹಾಗೂ ಸತ್ಯೇಂದ್ರ ಜೈನ್ ಈ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪಗಳಿಗೆ ಸಂಬಂಧಿಸಿದಂತೆ, ಅವರ ವಿರುದ್ಧ ಪ್ರಾಥಮಿಕ ಮಾಹಿತಿ ವರದಿ ದಾಖಲಿಸಿಕೊಳ್ಳಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅನುಮೋದನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಸಂಬಂಧ ಫೆಬ್ರವರಿ 17ರಂದು ವರದಿ ಸಲ್ಲಿಸಿದ್ದ ಕೇಂದ್ರ ವಿಚಕ್ಷಣಾ ಆಯೋಗವು, ದಿಲ್ಲಿ ಸರಕಾರಿ ಶಾಲೆಗಳಲ್ಲಿ ಲೋಕೋಪಯೋಗಿ ಇಲಾಖೆಯಿಂದ ನಡೆದಿರುವ 2,400 ತರಗತಿ ಕೋಣೆಗಳ ನಿರ್ಮಾಣ ಕಾಮಗಾರಿಯಲ್ಲಿ ಭಾರಿ ಅವ್ಯವಹಾರಗಳು ಜರುಗಿವೆ ಎಂಬುದರತ್ತ ಬೊಟ್ಟು ಮಾಡಿತ್ತು.