ದಲಿತರು, ಬುಡಕಟ್ಟು ಜನರು, ಬಡವರನ್ನು ಮತ್ತೊಮ್ಮೆ ಗುಲಾಮರನ್ನಾಗಿ ಮಾಡಲಾಗುತ್ತಿದೆ :‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್’ ರ್ಯಾಲಿಯಲ್ಲಿ ರಾಹುಲ್ ಗಾಂಧಿ

ರಾಹುಲ್ ಗಾಂಧಿ | PC : PTI
ಮಹು (ಮ.ಪ್ರ.): ಬಿಜೆಪಿ ಹಾಗೂ ಆರ್ಎಸ್ಎಸ್ ಬಿ.ಆರ್. ಅಂಬೇಡ್ಕರ್ ಹಾಗೂ ಅವರ ರಚಿಸಿದ ಸಂವಿಧಾನಕ್ಕೆ ಅವಮಾನ ಮಾಡುತ್ತಿದೆ ಎಂದು ಲೋಕಸಭೆಯಲ್ಲಿ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ.
ಅಧಿಕಾರದಲ್ಲಿರುವರಿಂದ ಸಂವಿಧಾನವನ್ನು ರಕ್ಷಿಸಬೇಕು ಎಂದು ಅವರು ಪಕ್ಷದ ಕಾರ್ಯಕರ್ತರನ್ನು ಆಗ್ರಹಿಸಿದ್ದಾರೆ.
ಇಲ್ಲಿ ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್’ ರ್ಯಾಲಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಕೇಂದ್ರದಲ್ಲಿ ಅಧಿಕಾರ ಸ್ವೀಕರಿಸಿದ ಕೂಡಲೇ ಕಾಂಗ್ರೆಸ್ ರಾಷ್ಟ್ರ ವ್ಯಾಪಿ ಜಾತಿ ಗಣತಿ ನಡೆಸಲಿದೆ ಎಂದು ಘೋಷಿಸಿದರು.
ಪ್ರಧಾನಿ ನರೇಂದ್ರ ಮೋದಿ ಜಾತಿ ಗಣತಿ ನಡೆಸಲು ಹೆದರುತ್ತಿದ್ದಾರೆ. ಆದುದರಿಂದ ಅವರು ಯಾವತ್ತೂ ಜಾತಿ ಗಣತಿ ನಡೆಸುವುದಿಲ್ಲ ಎಂದು ಅವರು ಹೇಳಿದರು.
ಶೇ. 50 ಮೀಸಲಾತಿ ಗೋಡೆಯನ್ನು ಕಾಂಗ್ರೆಸ್ ಒಡೆಯಲಿದೆ ಹಾಗೂ ಲೋಕಸಭೆ ಹಾಗೂ ರಾಜ್ಯ ಸಭೆಯಲ್ಲಿ ಇದಕ್ಕೆ ಸಂಬಂಧಿಸಿ ಕಾನೂನು ತರಲಿದೆ ಎಂದು ರಾಹುಲ್ ಗಾಂಧಿ ಹೇಳಿದರು.
ಶತಕೋಟ್ಯಧಿಪತಿಗಳಿಗಾಗಿ ಬಿಜೆಪಿ ನೇತೃತ್ವದ ಬಿಜೆಪಿ ಕಾರ್ಯ ನಿರ್ವಹಿಸುತ್ತಿದೆ ಎಂದು ಆರೋಪಿಸಿದ ಅವರು, ಉದ್ಯೋಗವಕಾಶ ಕೊನೆಗೊಳ್ಳುತ್ತಿದ್ದಂತೆ ಹಾಗೂ ದೇಶದ ಸಂಪತ್ತು ಕೆಲವೇ ಕ್ರೋನಿ ಬಂಡವಾಳಶಾಹಿಗಳ ಹಸ್ತಾಂತರವಾಗುತ್ತಿದ್ದಂತೆ ದಲಿತರು ಹಿಂದುಳಿದವರು, ಬುಡಕಟ್ಟು ಜನರು ಹಾಗೂ ಬಡವರು ಮತ್ತೊಮ್ಮೆ ಗುಲಾಮರಾಗಲಿದ್ದಾರೆ ಎಂದರು.
‘‘ಬಿಜೆಪಿ ಹಾಗೂ ಆರ್ಎಸ್ಎಸ್ ದೇಶದಲ್ಲಿ ಸ್ವಾತಂತ್ರ್ಯ ಪೂರ್ವದಂತಹ ಪರಿಸ್ಥಿತಿಯನ್ನು ಬಯಸುತ್ತಿದೆ. ಅಲ್ಲಿ ಶ್ರೀಮಂತರಿಗೆ ಮಾತ್ರ ಹಕ್ಕುಗಳಿವೆ. ಬಡವರಿಗೆ ಯಾವುದೇ ಹಕ್ಕುಗಳಿಲ್ಲ’’ ಎಂದು ರಾಹುಲ್ ಗಾಂಧಿ ಹೇಳಿದರು.
ಡಾ.ಬಿ.ಆರ್. ಅಂಬೇಡ್ಕರ್ ರಚಿಸಿದ ಸಂವಿಧಾನವನ್ನು ಬದಲಾಯಿಸಲು ಬಿಜೆಪಿ ಹಾಗೂ ಆರ್ಎಸ್ಎಸ್ ಪ್ರಯತ್ನಿಸುತ್ತಿದೆ. ಆದುದರಿಂದಲೇ ಅವು ಕಳೆದ ವರ್ಷ ನಡೆದ ಲೋಕಸಭಾ ಚುನಾವಣೆಯಲ್ಲಿ ‘‘ನಾವು ಈ ಬಾರಿ 400ಕ್ಕೂ ಅಧಿಕ ಸ್ಥಾನ ಗೆಲ್ಲುತ್ತೇವೆ’’ ಎಂದು ಘೋಷಿಸಿದ್ದವು ಎಂದು ರಾಹುಲ್ ಗಾಂಧಿ ಹೇಳಿದರು.







