ಎಚ್ಡಿಎಫ್ಸಿ ಬ್ಯಾಂಕ್ ಎಂಡಿ ಜಗದೀಶನ್ ವಿರುದ್ಧದ ಎಫ್ಐಆರ್ ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನಕಾರ

ಶಶಿಧರ್ ಜಗದೀಶನ್ | PC : X
ಹೊಸದಿಲ್ಲಿ: ತನ್ನ ವಿರುದ್ಧ ದಾಖಲಾದ ಎಫ್ಐಆರ್ ಅನ್ನು ರದ್ದುಗೊಳಿಸುವಂತೆ ಕೋರಿ ಎಚ್ಡಿಎಫ್ಸಿ ಬ್ಯಾಂಕ್ನ ಆಡಳಿತ ನಿರ್ದೇಶಕ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶಶಿಧರ್ ಜಗದೀಶನ್ ಸಲ್ಲಿಸಿದ ಅರ್ಜಿಯನ್ನು ಪುರಷ್ಕರಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.
ಈ ಪ್ರಕರಣದ ವಿಚಾರಣೆ ಜುಲೈ 14ರಂದು ಬಾಂಬೆ ಉಚ್ಚ ನ್ಯಾಯಾಲಯದಲ್ಲಿ ನಡೆಯಲಿದೆ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.
ಮುಂಬೈಯಲ್ಲಿ ಲೀಲಾವತಿ ಆಸ್ಪತ್ರೆಯ ಆಡಳಿತ ನಿರ್ವಹಿಸುತ್ತಿರುವ ಲೀಲಾವತಿ ಕೀರ್ತಿಲಾಲ್ ಮೆಹ್ತಾ ಮೆಡಿಕಲ್ ಟ್ರಸ್ಟ್ ಒಳಗೊಂಡ ಹಣಕಾಸು ಅವ್ಯವಹಾರದ ಆರೋಪಕ್ಕೆ ಸಂಬಂಧಿಸಿ ಆರಂಭಿಸಲಾದ ಕಾನೂನು ಕ್ರಮಗಳಿಗೆ ತಡೆ ನೀಡಲು ನ್ಯಾಯಮೂರ್ತಿ ಪಿ.ಎಸ್. ನರಸಿಂಹ ನೇತೃತ್ವದ ಪೀಠ ನಿರಾಕರಿಸಿದೆ.
ಟ್ರಸ್ಟ್ಗೆ ಸಂಬಂಧಿಸಿದ ಹಣಕಾಸು ವ್ಯವಹಾರದಲ್ಲಿ ಅವರ ಪಾತ್ರವನ್ನು ಉಲ್ಲೇಖಿಸಿ ಎಫ್ಐಆರ್ ದಾಖಲಿಸಿದ ಬಳಿಕ ಜಗದೀಶನ್ ಅವರು ಸುಪ್ರೀಂ ಕೋರ್ಟ್ನ ಮೆಟ್ಟಿಲೇರಿದ್ದರು. ಆದರೆ, ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸದಿರಲು ನಿರ್ಧರಿಸಿದೆ ಹಾಗೂ ಬಾಂಬೆ ಉಚ್ಚ ನ್ಯಾಯಾಲಯಕ್ಕೆ ವಿಚಾರಣೆ ನಡೆಸಲು ಅವಕಾಶ ನೀಡಿದೆ.





