ಪಶ್ಚಿಮ ಬಂಗಾಳ | ಬಿಎಲ್ಒಗಳಿಗೆ ಭದ್ರತೆ ನೀಡುವಂತೆ ಪೊಲೀಸರಿಗೆ ಎರಡನೇ ಪತ್ರ ಬರೆದ ಚುನಾವಣಾ ಆಯೋಗ

ಚುನಾವಣಾ ಆಯೋಗ | Photo Credit : PTI
ಹೊಸದಿಲ್ಲಿ: ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಹೊರಗೆ ಉದ್ವಿಗ್ನತೆ ಸೃಷ್ಟಿಯಾದ ಮೂರು ದಿನಗಳ ಬಳಿಕ ಭಾರತದ ಚುನಾವಣಾ ಆಯೋಗ (ಇಸಿಐ) ಪಶ್ಚಿಮ ಬಂಗಾಳದ ಪೊಲೀಸ್ ಮಹಾ ನಿರ್ದೇಶಕ (ಡಿಜಿಪಿ) ರಾಜೀವ್ ಕುಮಾರ್ ಅವರಿಗೆ ಪತ್ರ ಬರೆದಿದೆ.
ನವೆಂಬರ್ 28ರ ದಿನಾಂಕದ ಈ ಪತ್ರದಲ್ಲಿ ಭಾರತದ ಚುನಾವಣಾ ಆಯೋಗ (ಇಸಿಐ)ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)ಯಲ್ಲಿ ತೊಡಗಿರುವ ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ), ಮುಖ್ಯ ಚುನಾವಣಾಧಿಕಾರಿ (ಸಿಇಒ) ಹಾಗೂ ಇತರ ಚುನಾವಣಾಧಿಕಾರಿಗಳಿಗೆ ಭದ್ರತೆ ನೀಡುವಂತೆ ಪಶ್ಚಿಮಬಂಗಾಳದ ಉನ್ನತ ಕಾನೂನು ಜಾರಿ ಅಧಿಕಾರಿಗಳಿಗೆ ನಿರ್ದೇಶಿಸಿದೆ.
ಚುನಾವಣಾ ಸಿಬ್ಬಂದಿಗೆ ಯಾವುದೇ ಬೆದರಿಕೆಯನ್ನು ತಡೆಯಲು ಬಿಗಿ ಭದ್ರತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸಂಬಂಧಿತ ಅಧಿಕಾರಿಗಳನ್ನು ಪತ್ರದಲ್ಲಿ ಒತ್ತಾಯಿಸಲಾಗಿದೆ.
ಎಸ್ಐಆರ್ ಕೆಲಸದಲ್ಲಿ ತೊಡಗಿರುವ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್ಒ) ಹಾಗೂ ಇತರ ಸಿಬ್ಬಂದಿಯ ಭದ್ರತೆ ಕುರಿತು ಆಯೋಗ ಕಳವಳ ವ್ಯಕ್ತಪಡಿಸಿದೆ. ಅಲ್ಲದೆ, ಈ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಭದ್ರತೆ ನೀಡಲು ಕ್ರಮ ತೆಗೆದುಕೊಳ್ಳುವಂತೆ ಪೊಲೀಸರಿಗೆ ನಿರ್ದೇಶಿಸಿದೆ.
ಎಸ್ಐಆರ್ ವಿರೋಧಿಸಿ ಪ್ರತಿಭಟನೆ ನಡೆದ ಕೇಂದ್ರ ಕೋಲ್ಕತ್ತಾದ ಕಟ್ಟಡದಲ್ಲಿ ನವೆಂಬರ್ 24ರಂದು ಭದ್ರತಾ ಉಲ್ಲಂಘನೆ ಬಳಿಕ ಭದ್ರತಾ ಕ್ರಮಗಳನ್ನು ಹೆಚ್ಚಿಸುವಂತೆ ಭಾರತೀಯ ಚುನಾವಣಾ ಆಯೋಗ ಈ ನಿರ್ದೇಶನ ನೀಡಿದೆ.







